ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚಿಸಲು ಶನಿವಾರ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.
ಶಾಸಕರ ಅಭಿಪ್ರಾಯ ಪಡೆದ ನಂತರವೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ನಿರ್ಧರಿಸಿದ್ದಾರೆ. ಹೀಗಾಗಿ ಶನಿವಾರ ಸಂಜೆ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಪಕ್ಷದ ಶಾಸಕರು ಇಲ್ಲದ ಕ್ಷೇತ್ರಗಳಲ್ಲಿ ಮುಖಂಡರೊಂದಿಗೆ ಸಮಾಲೋಚಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಮೊದಲಿಗೆ ಮುಖಂಡರ ಸಭೆ ನಡೆಯಲಿದೆ. ಅದಾದ ನಂತರ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ ಎಂದು ಪಕ್ಷದ ಮುಖಂಡರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.
ಶಾಸಕರು, ಮಾಜಿ ಸಚಿವರು, ಮುಖಂಡರೊಂದಿಗೆ ಚರ್ಚಿಸಿದ ನಂತರ ಜನವರಿ ಮೊದಲ ವಾರದ ವೇಳೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಸಂಕ್ರಾಂತಿ ನಂತರ ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರು ಎರಡು ತಂಡಗಳಲ್ಲಿ ಪ್ರತ್ಯೇಕವಾಗಿ ಪ್ರವಾಸ ಮಾಡುವ ಮೂಲಕ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಎನ್ನಲಾಗಿದೆ.