ಬೆಂಗಳೂರು: ಲೋಕಸಭಾ ಚುನಾವಣೆಗೆ ಮೊದಲೇ ನಿಗಮ – ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡುವ ಸಾಧ್ಯತೆ ಇದ್ದು, ಶನಿವಾರ ನಡೆಯುವ ಕೆಪಿಸಿಸಿ ಸಮನ್ವಯ ಸಮಿತಿ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ನಿಗಮ – ಮಂಡಳಿಗಳ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ 5 ಸಾವಿರಕ್ಕೂ ಅಧಿಕ ಆಕಾಂಕ್ಷಿಗಳು ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಮುಖ್ಯಮಂತ್ರಿ ಅವರಿಗೆ ಮನವಿ ನೀಡಿದ್ದಾರೆ.
ಸಮನ್ವಯ ಸಮಿತಿ ಸಭೆಯಲ್ಲಿ ಅವುಗಳನ್ನೆಲ್ಲ ಪರಿಶೀಲಿಸಿ ಮೊದಲ ಹಂತದಲ್ಲಿ 20ರಿಂದ 25 ಜನ ಶಾಸಕರು, ಕಾರ್ಯಕರ್ತರನ್ನು ನೇಮಕ ಮಾಡಲಾಗುತ್ತದೆ ಎಂದು ಗೊತ್ತಾಗಿದೆ.
ಒಂದೇ ಹಂತದಲ್ಲಿ ನೇಮಕ ಮಾಡಿದರೆ ಅವಕಾಶ ಸಿಗದವರು ಅಸಮಾಧಾನಗೊಳ್ಳಬಹುದು ಎಂಬ ಕಾರಣಕ್ಕೆ ಎರಡು ಹಂತಗಳಲ್ಲಿ ನೇಮಕ ಮಾಡಲು ನಿರ್ಧರಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಸಮಿತಿಗಳಿಗೆ ಮೊದಲ ಹಂತದಲ್ಲಿ ನೇಮಕ ಮಾಡಲಾಗುತ್ತದೆ. ಅಲ್ಲಿ ಅವಕಾಶ ಸಿಗದವರಿಗೆ, ಪಕ್ಷಕ್ಕಾಗಿ ಹಲವು ವರ್ಷಗಳಿಂದ ದುಡಿಯುತ್ತಿರುವ ಕಾರ್ಯಕರ್ತರಿಗೆ ರಾಜ್ಯಮಟ್ಟದಲ್ಲಿ ನೇಮಕಕ್ಕೆ ಆದ್ಯತೆ ನೀಡಲಾಗುತ್ತದೆ ಎಂದು ಮುಖಂಡರೊಬ್ಬರು ತಿಳಿಸಿದರು.
ಅಭ್ಯರ್ಥಿಗಳ ಪಟ್ಟಿ: ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಸಮ್ಮುಖದಲ್ಲಿ ಕೆಪಿಸಿಸಿ ಚುನಾವಣಾ ಸಮಿತಿ ಸಭೆ ಶನಿವಾರ ನಡೆಯಲಿದ್ದು, ಲೋಕಸಭಾ ಚುನಾವಣೆಗೆ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ.