ಕೋಲಾರ: `ನೇತ್ರಾವತಿ ನದಿ ತಿರುವು ಯೋಜನೆ ಅನುಷ್ಠಾನದ ಕುರಿತು ಬಯಲು ಸೀಮೆಯ ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆ ಜನಪ್ರತಿನಿಧಿಗಳು, ತಜ್ಞರೊಡನೆ ಸಮಾಲೋಚನೆ ನಡೆಸಿ ನಿರ್ಧರಿಸಲಾಗುವುದು~ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಇಲ್ಲಿ ಶುಕ್ರವಾರ ತಿಳಿಸಿದರು.
ದೇವರಾಜ ಅರಸ್ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಬೆಳ್ಳಿ ಮಹೋತ್ಸವದ ಅಂಗವಾಗಿ ನಡೆದ ರಜತ ಭವನ, ಗ್ರಂಥಾಲಯ, ಮಾಹಿತಿ ಕೇಂದ್ರಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಅವರು ಮುಖಂಡರೊಡನೆ ಮಾತನಾಡಿದರು.
ನೇತ್ರಾವತಿ ಯೋಜನೆ ಅನುಷ್ಠಾನ ಸಂಬಂಧ ಗೊಂದಲಮಯ ಹೇಳಿಕೆ ನೀಡುತ್ತಿರುವುದರಿಂದ ಜಿಲ್ಲೆಯ ಜನರಿಗೆ ಆತಂಕ ಎದುರಾಗಿದೆ ಎಂದು ಮಾಜಿ ಸಚಿವ ಕೆ.ಶ್ರೀನಿವಾಸಗೌಡ ನೇತೃತ್ವದಲ್ಲಿ ಮುಖಂಡರು ಮನವಿ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಯೋಜನೆ ಅನುಷ್ಠಾನ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾದ ತಮ್ಮ ಹೇಳಿಕೆಗಳ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
`ಬಯಲು ಸೀಮೆಯ ಜಿಲ್ಲೆಗಳ ನೀರಿನ ಸಮಸ್ಯೆಯನ್ನು ನೀಗಿಸಲು ಸರ್ಕಾರ ಬದ್ಧವಾಗಿದೆ. ಆದರೆ ಪಶ್ಚಿಮಘಟ್ಟದ ಪರಿಸರಕ್ಕೆ ಹಾನಿಯಾಗುವಂಥ ಮತ್ತು ಆ ಪ್ರದೇಶದ ಜಿಲ್ಲೆಗಳ ಜನರಿಗೆ ತೊಂದರೆಯಾಗುವಂಥ ಯಾವುದೇ ಯೋಜನೆಗಳಿಗೆ ನನ್ನ ವಿರೋಧವಿದೆ ಎಂದು ಮೊದಲಿನಿಂದಲೂ ಹೇಳುತ್ತಿದ್ದೇನೆ. ಅದೇ ಮಾತನ್ನು ಈಗಲೂ ಹೇಳುತ್ತೇನೆ. ಮುಂದೆಯೂ ಹೇಳುತ್ತೇನೆ. ಕರಾವಳಿ ಭಾಗದ ಮೂರು ಜಿಲ್ಲೆಗಳಿಗೆ ತೊಂದರೆಯಾಗುವಂಥ ಯಾವುದೇ ಯೋಜನೆಗೆ ಸಕಾರಾತ್ಮಕ ಪ್ರತಿಕ್ರಿಯೆ ನೀಡಲಾರೆ~ ಎಂದು ಖಚಿತವಾಗಿ ನುಡಿದರು.
`ನೇತ್ರಾವತಿ ನದಿಯಿಂದ ಬಯಲು ಸೀಮೆ ಜಿಲ್ಲೆಗಳಿಗೆ ನೀರು ಪೂರೈಸುವ ಯೋಜನೆ ಸಿದ್ಧಪಡಿಸಿರುವ ತಜ್ಞ ಪರಮಶಿವಯ್ಯ ಸೇರಿದಂತೆ ಆ ಜಿಲ್ಲೆಗಳ ಮುಖಂಡರು, ಸಂಘಟನೆಗಳ ಪ್ರತಿನಿಧಿಗಳ ಸಭೆಯನ್ನು 15 ದಿನದೊಳಗೆ ನಡೆಸಲಾಗುವುದು.
ನಾಲ್ಕೂ ಜಿಲ್ಲೆಗಳ ನೀರಿನ ಸಮಸ್ಯೆ ನೀಗಿಸುವ ನಿಟ್ಟಿನಲ್ಲಿ ಯಾವುದಾದರೂ ಒಂದು ಯೋಜನೆಯನ್ನು ಒಂದು ತಿಂಗಳೊಳಗೆ ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ~ ಎಂದರು.
ಭದ್ರಾ ಮೇಲ್ದಂಡೆ ಯೋಜನೆಯಲ್ಲೂ ಈ ಜಿಲ್ಲೆಗಳಿಗೆ ನೀರು ಕೊಡುವ ಅವಕಾಶವಿದೆ. ಅದಕ್ಕಾಗಿ ರೂ. 17 ಸಾವಿರ ಕೋಟಿ ಬಿಡುಗಡೆಗೆ ಅನುಮೋದನೆ ದೊರೆತಿದೆ~ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.