ಸಂಡೂರು (ಬಳ್ಳಾರಿ ಜಿಲ್ಲೆ): ಅಕ್ರಮ ಗಣಿಗಾರಿಕೆ ಕುರಿತು ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ನೀಡಿರುವ ವರದಿಯ ಅನುಷ್ಠಾನ ಕುರಿತು ಮಂತ್ರಿಮಂಡಳ ಸಭೆಯಲ್ಲಿ ಚರ್ಚಿಸಿ, ನಂತರ ಕ್ರಮ ತೆಗೆದುಕೊಳ್ಳಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸಂಡೂರು ತಾಲೂಕಿನ ತೋರಣಗಲ್ಲಿಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ಭಾನುವಾರ ಬಂದ ಸಂದರ್ಭ ಅಲ್ಲಿನ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು. `ಅಕ್ರಮ ಗಣಿಗಾರಿಕೆ ಪ್ರಕರಣವನ್ನು ಆಂಧ್ರಪ್ರದೇಶ ಸರ್ಕಾರ ಸಿಬಿಐಗೆ ವಹಿಸಿದಂತೆ, ರಾಜ್ಯದಲ್ಲಿನ ಪ್ರಕರಣ ಸಿಬಿಐಗೆ ವಹಿಸುವಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, `ಈ ವಿಷಯ ಈಗ ಸುಪ್ರೀಂ ಕೋರ್ಟ್ನಲ್ಲಿದೆ. ಕೇಂದ್ರ ಉನ್ನತಾಧಿಕಾರ ಸಮಿತಿಯು ವರದಿ ನೀಡಿದೆ. ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಪಾಲಿಸುತ್ತೇವೆ' ಎಂದು ಪ್ರತಿಕ್ರಿಯಿಸಿದರು.
ಹೂಳೆತ್ತುವಿಕೆ: `ತುಂಗಾಭದ್ರಾ ಜಲಾಶಯದಲ್ಲಿನ ಹೂಳೆತ್ತುವ ಕುರಿತು ತಜ್ಞರೊಂದಿಗೆ ಚರ್ಚಿಸಿದ ನಂತರ ಕ್ರಮ ತೆಗೆದುಕೊಳ್ಳಲಾಗುವುದು' ಎಂದರು.
ಗುಟ್ಕಾ ನಿಷೇಧ: `ಸುಪ್ರೀಂ ಕೋರ್ಟ್ ಆದೇಶದಂತೆ ಗುಟ್ಕಾ ನಿಷೇಧ ಕುರಿತು ಕ್ರಮ ಕೈಗೊಳ್ಳಲಾಗಿದೆ. ಸಚಿವ ಸಂಪುಟದ ವಿಸ್ತರಣೆ ಸದ್ಯಕ್ಕಿಲ್ಲ' ಎಂದು ಪ್ರಶ್ನೆಯೊಂದಕ್ಕೆ ಸಿದ್ದರಾಮಯ್ಯ ಉತ್ತರಿಸಿದರು.