ಬೆಂಗಳೂರು: ನ್ಯಾಯಾಂಗ ಬಂಧನದಲ್ಲೇ ಆಸ್ಪತ್ರೆ ಸೇರಿರುವ ಕೆಐಎಡಿಬಿ ಭೂ ಹಗರಣದ ಪ್ರಮುಖ ಆರೋಪಿ, ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರಿಗೆ ಕತ್ತಿನ ನರದ ಶಸ್ತ್ರಚಿಕಿತ್ಸೆ ನಡೆಸುವುದಕ್ಕೆ ಸಂಬಂಧಿಸಿದಂತೆ ಈವರೆಗೆ ನಡೆದಿರುವ ವೈದ್ಯಕೀಯ ತಪಾಸಣೆಗಳ ವರದಿ ವಿಕ್ಟೋರಿಯಾ ಆಸ್ಪತ್ರೆ ಅಧೀಕ್ಷಕ ಡಾ.ಬಿ.ಜಿ. ತಿಲಕ್ ಗುರುವಾರ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದರು.
ಕಟ್ಟಾ ಚಿಕಿತ್ಸೆಗೆ ಸಂಬಂಧಿಸಿದ ವಿವರ ಸಕಾಲಕ್ಕೆ ನ್ಯಾಯಾಲಯಕ್ಕೆ ಒದಗಿಸದ ಕಾರಣ ತಿಲಕ್, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಲಕ್ಷ್ಮಿನಾರಾಯಣ್ ಅವರನ್ನು ಗುರುವಾರ ನ್ಯಾಯಾಲಯಕ್ಕೆ ಕರೆಸಿದ `ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ~ (ಲೋಕಾಯುಕ್ತ) ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.