ಬೆಂಗಳೂರು: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವೇ ವಿಜಾಪುರ ವಿಮಾನ ನಿಲ್ದಾಣ ನಿರ್ಮಾಣ ಯೋಜನೆಯನ್ನು ಕೈಗೆತ್ತಿಕೊಳ್ಳಲಿದೆ ಎಂದು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಸ್.ಆರ್.ಪಾಟೀಲ್ ಶುಕ್ರವಾರ ಇಲ್ಲಿ ತಿಳಿಸಿದರು.
ಬೆಂಗಳೂರು ಅಂತರರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಕೆಂಪೇಗೌಡರ ಹೆಸರು ನಾಮಕರಣ ಮತ್ತು ನೂತನ ಟರ್ಮಿನಲ್ ಉದ್ಘಾಟನೆ ಬಗ್ಗೆ ಮಾಹಿತಿ ನೀಡಲು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಸಚಿವರು ಈ ವಿಷಯ ತಿಳಿಸಿದರು.
‘ಮಾರ್ಗ’ ಎಂಬ ಖಾಸಗಿ ಸಂಸ್ಥೆಯ ಸಹಭಾಗಿತ್ವದಲ್ಲಿ ವಿಮಾನ ನಿಲ್ದಾಣ ನಿರ್ಮಿಸಲು ಈ ಮೊದಲು ಒಪ್ಪಂದವಾಗಿತ್ತು. ಆದರೆ, ಆ ಸಂಸ್ಥೆ ನಿರ್ಮಾಣಕ್ಕೆ ಹಿಂದೇಟು ಹಾಕುತ್ತಿದ್ದು, ಅದನ್ನು ವಿಮಾನ ನಿಲ್ದಾಣ ಪ್ರಾಧಿಕಾರವೇ ನಿರ್ಮಾಣ ಮಾಡಲು ಮುಂದೆ ಬಂದಿದೆ ಎಂದು ವಿವರಿಸಿದರು.
ವಿಮಾನ ನಿಲ್ದಾಣ ಸಲುವಾಗಿ 700 ಎಕರೆ ಜಾಗವನ್ನು ಸರ್ಕಾರ ಗುರುತಿಸಿದ್ದು, ಅಲ್ಲಿ ಹೆಚ್ಚಾಗಿ ಬೆಟ್ಟಗುಡ್ಡಗಳು ಇವೆ. ಅದನ್ನು ಸಮತಟ್ಟು ಮಾಡಲು ಸುಮಾರು ರೂ 100 ಕೋಟಿ ಖರ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಕನಿಷ್ಠ ಶೇ 50ರಷ್ಟು ಹಣವನ್ನು ರಾಜ್ಯ ಸರ್ಕಾರ ಭರಿಸಿದರೆ, ಯೋಜನೆ ಕೈಗೆತ್ತಿಕೊಳ್ಳುವುದಾಗಿ ಪ್ರಾಧಿಕಾರ ತಿಳಿಸಿತ್ತು. ಆ ಪ್ರಕಾರ ರೂ50 ಕೋಟಿ ನೀಡಲು ಮುಖ್ಯಮಂತ್ರಿ ಒಪ್ಪಿದ್ದಾರೆ ಎಂದು ಅವರು
ಹೇಳಿದರು.
ಗುಲ್ಬರ್ಗ ವಿಮಾನ ನಿಲ್ದಾಣದ ಕಾಮಗಾರಿ ಶೇ 80ರಷ್ಟು ಪೂರ್ಣಗೊಂಡಿದೆ. ಬಾಕಿ ಕಾಮಗಾರಿಯನ್ನು ಮುಗಿಸಲು ಸಂಬಂಧಪಟ್ಟ ಗುತ್ತಿಗೆದಾರರು ಮುಂದೆ ಬರುತ್ತಿಲ್ಲ. ಹೀಗಾಗಿ ಅದನ್ನು ಹೇಗಾದರೂ ಮಾಡಿ ಪೂರ್ಣಗೊಳಿಸಲು ನಿರ್ಧರಿಸಿದ್ದು, ಅದರ ಬಳಿಕ ವಿಮಾನ ಹಾರಾಟ ಆರಂಭವಾಗಲಿದೆ ಎಂದು ಅವರು ತಿಳಿಸಿದರು.
ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣ ಯೋಜನೆ ಕೂಡ ಇದುವರೆಗೂ ಅನುಷ್ಠಾನಕ್ಕೆ ಬಂದಿಲ್ಲ. ಹೀಗಾಗಿ ಸಂಬಂಧಪಟ್ಟ ಗುತ್ತಿಗೆದಾರ ಸಂಸ್ಥೆ ಜತೆಗಿನ ಒಪ್ಪಂದವನ್ನು ರದ್ದು ಮಾಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಅವರು ವಿವರಿಸಿದರು.