ಬೆಳಗಾವಿ: ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆ ಹಾಗೂ ಅಭಿವೃದ್ಧಿಗೆ ಪೂರಕವಾಗಲಿ ಎಂಬ ಉದ್ದೇಶದಿಂದ ನಿರ್ಮಿಸಲಾದ ಸುವರ್ಣ ವಿಧಾನಸೌಧದಲ್ಲಿ ಈ ಬಾರಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಯುವುದಿಲ್ಲ ಎಂಬುದು ಇಲ್ಲಿನ ಜನರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
ಸುವರ್ಣ ವಿಧಾನಸೌಧ ಉದ್ಘಾಟನೆಯಾದ ನಂತರ ಎರಡು ವರ್ಷ ಚಳಿಗಾಲದ ಅಧಿವೇಶನ ನಡೆಸುವಷ್ಟರಲ್ಲೇ ಈ ಭಾಗದ ಸಮಸ್ಯೆಗಳ ಮಹಾಪೂರದ ಸುಳಿಗೆ ಸಿಲುಕಿ ರಾಜ್ಯ ಸರ್ಕಾರ ನಲುಗಿ ಹೋಗಿದೆಯೇ ಎಂದು ಜನರು ಪ್ರಶ್ನೆ ಮಾಡುತ್ತಾರೆ.
ಚಳಿಗಾಲದ ಅಧಿವೇಶನ ಇಲ್ಲಿಯೇ ನಡೆಸಬೇಕು ಹಾಗೂ ಸರ್ಕಾರಿ ಕಚೇರಿಗಳನ್ನು ಇಲ್ಲಿಗೆ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿ ಅ. 31ರ ಬೆಳಿಗ್ಗೆ 11ರಿಂದ ಸಂಜೆ 4ರ ವರೆಗೆ ಸುವರ್ಣ ವಿಧಾನಸೌಧದ ಎದುರು ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಸಲು ಮಂಗಳವಾರ ನಡೆದ ವಿವಿಧ ಕನ್ನಡಪರ ಸಂಘಟನೆಗಳ ಸಭೆಯಲ್ಲಿ ನಿರ್ಧರಿಸಲಾಯಿತು.
‘ರಾಜ್ಯ ಸರ್ಕಾರಕ್ಕೆ ಉತ್ತರ ಕರ್ನಾಟಕದ ಬಗ್ಗೆ ತಾತ್ಸಾರ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿಯಲ್ಲಿ ನಡೆಯಬೇಕಿದ್ದ ವಿಧಾನಮಂಡಲ ಅಧಿವೇಶನ ರದ್ದುಗೊಳಿಸುವ ಹುನ್ನಾರ ಮಾಡಿದ್ದಾರೆ’ ಎಂದು ಮಾಜಿ ಮೇಯರ್ ಸಿದ್ಧನಗೌಡ ಪಾಟೀಲ ಆರೋಪಿಸಿದರು.
‘ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉತ್ತರ ಕರ್ನಾಟಕದ ಜನತೆಯನ್ನು ಗುಲಾಮರಂತೆ ನೋಡುತ್ತಿದೆ. ಈ ಭಾಗದ ಅಭಿವೃದ್ಧಿ ದೃಷ್ಟಿಯಿಂದ ಬೆಳಗಾವಿಯಲ್ಲಿ ಪ್ರತಿ ವರ್ಷ ಅಧಿವೇಶನ ನಡೆಯಲೇಬೇಕು. ಉತ್ತರ ಕರ್ನಾಟಕವನ್ನು ಸಂಪೂರ್ಣ ಅಭಿವೃದ್ಧಿ ಮಾಡಬೇಕು. ಇಲ್ಲವಾದರೆ ಪ್ರತ್ಯೇಕ ರಾಜ್ಯ ರಚನೆಗೆ ಹೋರಾಟ ಮಾಡಬೇಕಾಗುತ್ತದೆ’ ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಎಚ್ಚರಿಸಿದರು.
ಈ ಭಾಗದ ಸಮಸ್ಯೆಗಳಿಗೆ ಸಮರ್ಪಕ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಡೆಯಬೇಕಿದ್ದ ಚಳಿಗಾಲದ ಅಧಿವೇಶನಕ್ಕೆ ಸರ್ಕಾರ ಆಸಕ್ತಿ ತೋರುತ್ತಿಲ್ಲ. ಅಧಿವೇಶನದ ಸಂದರ್ಭದಲ್ಲಿ ನಡೆಯಬಹುದಾದ ಪ್ರತಿಭಟನೆಗಳ ಮುಜುಗರ ಅದನ್ನು ಕಾಡುತ್ತಿದೆ. ಅದಕ್ಕಾಗಿಯೇ ಹಿಂದೇಟು ಹಾಕುತ್ತಿದೆ ಎಂದೂ ಅವರು ದೂರಿದರು.
ಕಳೆದ ಬಾರಿಯ ಅಧಿವೇಶನದ ಸಂದರ್ಭದಲ್ಲಿ ಕಬ್ಬು ಬೆಲೆ ನಿಗದಿಗೆ ಒತ್ತಾಯಿಸಿ ನಡೆದ ಪ್ರತಿಭಟನೆ
ಯಲ್ಲಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು. ಬಳಿಕ ರೈತ ಸಂಘಟನೆಗಳ ಹಾಗೂ ಪ್ರತಿಪಕ್ಷದ ಒತ್ತಡಕ್ಕೆ ಮಣಿದ ಸರ್ಕಾರವು, ಪ್ರತಿ ಟನ್ ಕಬ್ಬಿಗೆ ರೂ. 150 ಬೆಂಬಲ ಬೆಲೆ ಸೇರಿ ರೂ. 2,650 ಬೆಲೆಯನ್ನು ಘೋಷಿಸಿತ್ತು. ಆದರೆ, ಆ ದರ ಕಬ್ಬು ಬೆಳೆಗಾರರಿಗೆ ಇನ್ನೂ ಸಿಕ್ಕಿಲ್ಲ. ಹೀಗಾಗಿ ಈ ಬಾರಿ ಅಧಿವೇಶನದ ಸಂದರ್ಭದಲ್ಲಿ ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಲು ರೈತ ಸಂಘಟನೆ ಸಿದ್ಧತೆ ನಡೆಸಿದೆ. ಜೊತೆಗೆ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಒತ್ತಾಯಿಸಿ ಒಳ ಮೀಸಲಾತಿ ಹೋರಾಟ ಸಮಿತಿ ಸಹ ಉಗ್ರ ಪ್ರತಿಭಟನೆಗೆ ತಯಾರಿ ನಡೆಸಿದೆ. ಹೀಗಾಗಿ ಪ್ರತಿಭಟನೆಯ ಬಿಸಿ ತಪ್ಪಿಸಿಕೊಳ್ಳಲು ರಾಜ್ಯ ಸರ್ಕಾರ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಹಿಂದೇಟು ಹಾಕುತ್ತಿದೆ.
ಖಾಲಿ ಇರುವ ಸುವರ್ಣ ಸೌಧ
ರೂ. 391 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಸುವರ್ಣ ವಿಧಾನಸೌಧವನ್ನು 2012ರ ಅಕ್ಟೋಬರ್ 11ರಂದು ರಾಷ್ಟ್ರಪತಿ ಪ್ರಣವ್ ಮುಖರ್ಜಿ ಉದ್ಘಾಟಿಸಿದ್ದರು. ಈ ಕಟ್ಟಡದಲ್ಲಿ ಇದುವರೆಗೆ ಕೇವಲ ಎರಡು ಬಾರಿ ತಲಾ 10 ದಿನ ವಿಧಾನಮಂಡಲದ ಅಧಿವೇಶನ ನಡೆಸಲಾಗಿದೆ. ಮೂರನೇ ಅಧಿವೇಶನ ನಡೆಯುವುದು ಅನುಮಾನವಾಗಿದೆ.
ಸುವರ್ಣ ವಿಧಾನಸೌಧಕ್ಕೆ ಸರ್ಕಾರಿ ಕಚೇರಿಗಳನ್ನು ಸ್ಥಳಾಂತರ ಮಾಡುವ ವಿಚಾರ ಕೂಡ ನನೆಗುದಿಗೆ ಬಿದ್ದಿದೆ. ಈ ಸಂಬಂಧ ರಚಿಸಲಾಗಿದ್ದ ಸಮಿತಿಯನ್ನು ವಿಸರ್ಜನೆ ಮಾಡಲಾಗಿದೆ.
ಮರೆತ ವಾಗ್ದಾನ
ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ ರೂ. 2,650 ನೀಡುವುದಾಗಿ ರೈತರಿಗೆ ಭರವಸೆ ಕೊಟ್ಟಿತ್ತು. ಆದರೆ, ಭರವಸೆಯನ್ನು ಈವರೆಗೂ ಈಡೇರಿಸಿಲ್ಲ. ಈ ಆತಂಕ ಸರ್ಕಾರಕ್ಕೆ ಕಾಡುತ್ತಿದೆ. ಹೀಗಾಗಿ ಮುಖ್ಯಮಂತ್ರಿಗಳು ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಹಿಂಜರಿಯುತ್ತಿದ್ದಾರೆ.
–ಅಶೋಕ ಪೂಜಾರಿ, ಜೆಡಿಎಸ್ ಮುಖಂಡ
ವಾಡಿಕೆ ಪ್ರಕಾರ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಯಬೇಕು. ಇದಕ್ಕೆ ದಿನಾಂಕ ನಿಗದಿ ಮಾಡುವಂತೆ ಮುಖ್ಯಮಂತ್ರಿಗಳನ್ನು ಕೇಳಿದ್ದೇನೆ. ಈ ಬಗ್ಗೆ ರಾಜ್ಯ ಸಚಿವ ಸಂಪುಟ ತೀರ್ಮಾನ ಕೈಗೊಳ್ಳಬೇಕು.
–ಕಾಗೋಡು ತಿಮ್ಮಪ್ಪ
ಜಂಟಿ ಅಧಿವೇಶನ ನಡೆಸಲಿ
ತಾಂತ್ರಿಕ ಕಾರಣಗಳಿಂದಾಗಿ ನವೆಂಬರ್ನಲ್ಲಿ ಅಧಿವೇಶನ ನಡೆಸಲು ಸಾಧ್ಯವಾಗದಿದ್ದರೆ ಅದನ್ನು ಒಪ್ಪಿಕೊಳ್ಳಬಹುದು. ಆದರೆ, ಜನವರಿಯಲ್ಲಿ ಬೆಳಗಾವಿಯಲ್ಲೇ ವಿಧಾನಮಂಡಲದ ಜಂಟಿ ಅಧಿವೇಶನವನ್ನು ನಡೆಯಬೇಕು.
–ಅಶೋಕ ಚಂದರಗಿ, ಅಧ್ಯಕ್ಷರು, ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ
ಪ್ರಾದೇಶಿಕ ಅಸಮತೋಲನಕ್ಕೆ ನಾಂದಿ
ನಮ್ಮ ಸಮಸ್ಯೆಗಳನ್ನು ಸರ್ಕಾರದ ಬದಲು ಮತ್ತೆ ಯಾರ ಬಳಿ ಹೇಳಿಕೊಳ್ಳಬೇಕು? ಜನರ ಸಮಸ್ಯೆಗಳನ್ನು ಪರಿಹರಿಸುವುದು ಸರ್ಕಾರದ ಕರ್ತವ್ಯ. ಜನರು ಪ್ರತಿಭಟನೆ ನಡೆಸುತ್ತಾರೆ ಎಂದು ಬೆಂಗಳೂರಿನಲ್ಲೇ ವಿಧಾನಮಂಡಲದ ಅಧಿವೇಶನ ನಡೆಸಿದರೆ, ಪ್ರಾದೇಶಿಕ ಅಸಮತೋಲನಕ್ಕೆ ಎಡೆ ಮಾಡಿಕೊಟ್ಟಂತಾಗುತ್ತದೆ.
– ಸಿದ್ದಗೌಡ ಮೋದಗಿ, ಪ್ರಧಾನ ಕಾರ್ಯದರ್ಶಿ, ಭಾರತೀಯ ಕೃಷಿಕ ಸಮಾಜ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.