ಬೆಳಗಾವಿ: ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ)ಯನ್ನು ಬೆಳಗಾವಿಯಲ್ಲಿಯೇ ಆರಂಭಿಸಬೇಕು ಎಂದು ಆಗ್ರಹಿಸಿ ವಕೀಲರ ಸಂಘದ ನೇತೃತ್ವದಲ್ಲಿ ನ್ಯಾಯವಾದಿಗಳು ಸೋಮವಾರ ಪ್ರತಿಭಟನೆ ನಡೆಸಿದರು.
ಕರ್ನಾಟಕ ಆಡಳಿತ ನ್ಯಾಯಮಂಡ ಳಿಯನ್ನು ಹುಬ್ಬಳ್ಳಿಯಲ್ಲಿ ಆರಂಭಿಸುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಎಲ್ಲವನ್ನೂ ಹುಬ್ಬಳ್ಳಿಗೆ ನೀಡುವುದು ಸರಿಯಲ್ಲ. ಕೆಎಟಿಯನ್ನು ಬೆಳಗಾವಿಯಲ್ಲಿ ಆರಂಭಿಸಬೇಕು, ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಹಾಗೂ ಸಂಸದ ಸುರೇಶ ಅಂಗಡಿ ಅವರಿಗೆ ಸಲ್ಲಿಸಿರುವ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಹುಬ್ಬಳ್ಳಿ- ಧಾರವಾಡಕ್ಕೆ ಹಲವಾರು ಯೋಜನೆಗಳನ್ನು ಒದಗಿಸಲಾಗಿದೆ. ಹೈಕೋರ್ಟ್ ಸಂಚಾರಿ ಪೀಠ. ಕಾನೂನು ವಿಶ್ವವಿದ್ಯಾಲಯ, ಕೈಮಗ್ಗ ಅಭಿವೃದ್ಧಿ ನಿಗಮ, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ, ಕಾರ್ಮಿಕ ನ್ಯಾಯಾಲಯ ಮತ್ತಿತರ ಕಚೇರಿಗಳನ್ನು ಸಹ ಆರಂಭಿಸಲಾಗಿದೆ. ಬೆಳಗಾವಿಯನ್ನು ನಿರ್ಲಕ್ಷಿಸಲಾಗುತ್ತಿದ್ದು, ಈಗಿನ ಮುಖ್ಯಮಂತ್ರಿಗಳು ಸಹ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಮನವಿಯಲ್ಲಿ ಆಪಾದಿಸಲಾಗಿದೆ.
ಬೆಂಗಳೂರಿಗೆ ಸ್ಥಳಾಂತರಿಸಲಾಗಿರುವ ಸಿಬಿಐ ನ್ಯಾಯಾಲಯವನ್ನು ಪುನಃ ಬೆಳಗಾವಿಗೆ ಸ್ಥಳಾಂತರಿಸಬೇಕು ಎಂದು ವಕೀಲರು ಒತ್ತಾಯಿಸಿದ್ದಾರೆ.ಬೆಳಗಾವಿ ಭಾಗದ ಎಲ್ಲ ಚುನಾಯಿತ ಪ್ರತಿನಿಧಿಗಳು ನಿರ್ಲಕ್ಷ್ಯ ಭಾವನೆ ಹೊಂದಿದ್ದರಿಂದಲೇ ಇಂಥ ವಿಷಯಗಳು ಅವರಿಗೆ ತಿಳಿಯುತ್ತಿಲ್ಲ ಎಂದು ಆಪಾದಿಸಿ, ವಕೀಲರು ಸಂಸದ ಸುರೇಶ ಅಂಗಡಿ ಅವರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಿ ಕೆಎಟಿಯನ್ನು ಬೆಳಗಾವಿಯಲ್ಲಿ ಆರಂಭಿಸಲು ಕ್ರಮ ತೆಗೆದುಕೊಳ್ಳಬೇಕು ಹಾಗೂ ನಗರದ ಸ್ವಚ್ಛತೆ ಬಗ್ಗೆ ಗಮನ ಹರಿಸಬೇಕು ಎಂದು ಸಂಸದರಿಗೆ ವಕೀಲರು ಮನವಿ ಮಾಡಿದರು.
ವಕೀಲರ ಸಂಘದ ಅಧ್ಯಕ್ಷ ಎ.ಜಿ.ಮುಳವಾಡಮಠ, ರಮೇಶ ದೇಶ ಪಾಂಡೆ ಮುಂತಾದವರು ನೇತೃತ್ವ ವಹಿಸಿದ್ದರು.