ಮೈಸೂರು: ನಗರದಲ್ಲಿ ರಾಜ್ಯ ಕ್ರೀಡಾ ವಿಶ್ವವಿದ್ಯಾಲಯ ಆರಂಭಿಸಲು ಚಿಂತನೆ ನಡೆಸುವುದಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವ ಅಭಯಚಂದ್ರ ಜೈನ್ ತಿಳಿಸಿದರು.
ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆ ಮತ್ತು ಜಿಲ್ಲಾ ಘಟಕದ ಆಶ್ರಯದಲ್ಲಿ ಶನಿವಾರ ಆಯೋಜಿಸಲಾಗಿದ್ದ 48ನೇ ರಾಜ್ಯ ಕ್ರಾಸ್ಕಂಟ್ರಿ ಚಾಂಪಿಯನ್ಷಿಪ್ ವಿಜೇತರಿಗೆ ಪ್ರಶಸ್ತಿ ವಿತರಿಸಿದ ಅವರು ಮಾತನಾಡಿದರು.
‘ಶಾಸಕ ವಾಸು ಅವರು ಕ್ರೀಡಾ ವಿವಿಯ ಕುರಿತು ಪ್ರಸ್ತಾವ ಸಲ್ಲಿಸಿದ್ದಾರೆ. ಇದಕ್ಕೆ ಪೂರಕವಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದೇನೆ. ಮುಂದಿನ ಬಜೆಟ್ ವೇಳೆಗೆ ವಿವಿ ಸ್ಥಾಪನೆ ಆಗುವ ನಿರೀಕ್ಷೆ ಇದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಕ್ರೀಡಾಭಿವೃದ್ಧಿಗೆ ಎಲ್ಲ ಸಹಕಾರ ನೀಡುತ್ತದೆ’ ಎಂದರು.