ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಜೆಡಿಎಸ್ ಸಿದ್ಧತೆ ಆರಂಭಿಸಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಇದೇ 10ರಿಂದ ಲೋಕಸಭಾ ಕ್ಷೇತ್ರವಾರು ಸಮಾಲೋಚನಾ ಸಭೆ ನಡೆಸಲಿದ್ದಾರೆ ಎಂದು ಪಕ್ಷದ ವಕ್ತಾರ ವೈ.ಎಸ್.ವಿ.ದತ್ತ ತಿಳಿಸಿದ್ದಾರೆ.
ಪಕ್ಷದ ಸಂಘಟನೆ ಹಾಗೂ ಚುನಾವಣೆ ಪೂರ್ವಭಾವಿ ತಯಾರಿ ಕುರಿತು ಚರ್ಚಿಸಲು ಪ್ರತಿಯೊಂದು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಜಿಲ್ಲಾ ಘಟಕದ ಅಧ್ಯಕ್ಷರು, ಕಾರ್ಯಾಧ್ಯಕ್ಷರು, ಮಹಾಪ್ರಧಾನ ಕಾರ್ಯದರ್ಶಿ, ಹಿರಿಯ ಮುಖಂಡರು, ಮಾಜಿ ಸಂಸದರು, ಸಚಿವರು, ಶಾಸಕರ ಸಭೆ ಕರೆಯಲಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ. ಇದೇ 10ರಿಂದ 23ರವರೆಗೆ ಸಭೆ ನಡೆಯಲಿದೆ. ನಿತ್ಯ ಎರಡು ಲೋಕಸಭಾ ಕ್ಷೇತ್ರಗಳ ಬಗ್ಗೆ ಚರ್ಚಿಸಲಾಗುತ್ತದೆ ಎಂದು ಹೇಳಿದ್ದಾರೆ.