ಬೆಂಗಳೂರು: ಲೋಕಾಯುಕ್ತ ನ್ಯಾ. ಪಿ. ವಿಶ್ವನಾಥ ಶೆಟ್ಟಿ ಅವರನ್ನು ವಿಚಾರಣೆಗೆ ಬಂದಿದ್ದ ವ್ಯಕ್ತಿಯೊಬ್ಬ ಲೋಕಾಯುಕ್ತ ಕಚೇರಿಯಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.
(ಲೋಕಾಯುಕ್ತ ಕಚೇರಿಯ ಮೆಟ್ಟಿಲುಗಳ ಮೇಲೆ ರಕ್ತದ ಕಲೆ)
ಬುಧವಾರ ಲೋಕಾಯುಕ್ತ ಕಚೇರಿಗೆ ವಿಚಾರಣೆಗಾಗಿ ಬಂದಿದ್ದ ತೇಜಸ್ ಶರ್ಮಾ ಎಂಬ ಯುವಕ ಲೋಕಾಯುಕ್ತ ನ್ಯಾ.ಪಿ. ವಿಶ್ವನಾಥ ಶೆಟ್ಟಿ ಅವರಿಗೆ ಚಾಕುವಿನಿಂದ ಇರಿದಿದ್ದಾನೆ.
(ಲೋಕಾಯುಕ್ತ ಕಚೇರಿ ಒಳಗೆ ಸಿಬ್ಬಂದಿ)
ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರನ್ನು ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಆರೋಪಿ ತೇಜಸ್ನನ್ನು ಪೊಲಿಸರು ವಶಕ್ಕೆ ಪಡೆದಿದ್ದಾರೆ.
ರಾಜ್ಯ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಅವರು ಕಳೆದ ವರ್ಷ ಲೋಕಾಯುಕ್ತ ಸ್ಥಾನಕ್ಕೆ ನೇಮಕಗೊಂಡಿದ್ದರು.
ನ್ಯಾ. ವಿಶ್ವನಾಥ ಶೆಟ್ಟಿ ಪರಿಚಯ:
* 1944ರಲ್ಲಿ ಜನಿಸಿದ ನ್ಯಾ. ವಿಶ್ವನಾಥ ಶೆಟ್ಟಿ ಉಡುಪಿ ತಾಲ್ಲೂಕಿನ ಉಪ್ಪೂರು ಗ್ರಾಮದವರು. ಹೈಕೋರ್ಟ್ನಲ್ಲಿ 1966ರಲ್ಲಿ ವಕೀಲ ವೃತ್ತಿ ಆರಂಭಿಸಿದರು.
* 1993ರಿಂದ ಸುಪ್ರೀಂಕೋರ್ಟ್ ವಕೀಲರಾಗಿ ಕರ್ತವ್ಯ ನಿರ್ವಹಿಸಿದರು. ಕರ್ನಾಟಕ ವಕೀಲರ ಪರಿಷತ್ತಿನ ಅಧ್ಯಕ್ಷರಾಗಿದ್ದರು.
* 1995ರಲ್ಲಿ ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕಗೊಂಡರು. ಕರ್ನಾಟಕ ನ್ಯಾಯಾಂಗ ಅಕಾಡೆಮಿಯ ಮೊದಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಶೆಟ್ಟಿ ಅವರು, ಹೈಕೋರ್ಟ್ನ ಕಾನೂನು ಸೇವಾ ಸಮಿತಿ ಅಧ್ಯಕ್ಷ ಹಾಗೂ ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.