ಬೆಂಗಳೂರು: ಪ್ರತಿ ಯೂನಿಟ್ಗೆ 70 ಪೈಸೆ ಹೆಚ್ಚಳ ಮಾಡುವಂತೆ ಕೋರಿ ರಾಜ್ಯದ ಐದೂ ವಿದ್ಯುತ್ ಸರಬರಾಜು ಕಂಪೆನಿಗಳು (ಎಸ್ಕಾಂ) ಸೋಮವಾರ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ (ಕೆಇಆರ್ಸಿ) ಪ್ರಸ್ತಾವನೆ ಸಲ್ಲಿಸಿವೆ.
ಕಂಪೆನಿಗಳ ಆದಾಯ ಮತ್ತು ವೆಚ್ಚದ ನಡುವಿನ ಕೊರತೆಯನ್ನು ಸರಿದೂಗಿಸುವ ಉದ್ದೇಶದಿಂದ ದರ ಹೆಚ್ಚಳ ಅನಿವಾರ್ಯ ಎಂದು ಅವು ಪ್ರಸ್ತಾವನೆಯಲ್ಲಿ ತಿಳಿಸಿವೆ. ಆಯಾ ಕಂಪೆನಿಗಳು ಪ್ರತ್ಯೇಕವಾಗಿ ಪ್ರಸ್ತಾವನೆಗಳನ್ನು ಸಿದ್ಧಪಡಿಸಿವೆ. ಅವುಗಳನ್ನು ಪರಿಶೀಲಿಸಿದ ನಂತರ ಸಾರ್ವಜನಿಕರ ಮಾಹಿತಿಗಾಗಿ ಪತ್ರಿಕೆಗಳಲ್ಲಿ ವಿವರವಾದ ಪ್ರಕಟಣೆ ನೀಡಿ, ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕೊಡಲಾಗುತ್ತದೆ.
ಆಕ್ಷೇಪಣೆಗಳು ಬಂದ ನಂತರ ಆಯೋಗವು ವಿಭಾಗ ಮಟ್ಟದಲ್ಲಿ ಅಹವಾಲು ಸಭೆಗಳನ್ನು ನಡೆಸಲಿದೆ. ಈ ಪ್ರಕ್ರಿಯೆ ಪೂರ್ಣಗೊಳ್ಳಲು ಮೂರು ತಿಂಗಳು ಬೇಕಾಗುತ್ತದೆ. ಹೀಗಾಗಿ ಪರಿಷ್ಕೃತ ದರಗಳು 2013ರ ಏಪ್ರಿಲ್ 1ರಿಂದ ಜಾರಿಗೆ ಬರಲಿವೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (ಕೆಪಿಟಿಸಿಎಲ್) ಸಹ ಪ್ರಸರಣ ವೆಚ್ಚವನ್ನು ಜಾಸ್ತಿ ಮಾಡುವಂತೆ ಕೋರಿ ಪ್ರಸ್ತಾವನೆ ಸಲ್ಲಿಸಿದೆ. ಆದರೆ ಅದರ ವಿವರ ಗೊತ್ತಾಗಿಲ್ಲ.