ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಮೇಲೆ ಫರ್ಜಿ ಕೆಫೆಯಲ್ಲಿ ಹಲ್ಲೆ ನಡೆಸಿದ ಆರೋಪಿ ಮೊಹಮದ್ ನಲಪಾಡ್ ನ್ಯಾಯಾಂಗ ಬಂಧನ ಅವಧಿಯನ್ನು ನ್ಯಾಯಾಲಯ ಮೇ 11ರವರೆಗೆ ವಿಸ್ತರಿಸಿದೆ.
ಇದೇ ವೇಳೆ ಮೊಹಮದ್ ನಲಪಾಡ್ ಪರ ವಕೀಲರು ನಲಪಾಡ್ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು.
ಶನಿವಾರ ನಗರದ ಒಂದನೇ ಎಸಿಎಂಎಂ ನ್ಯಾಯಾಲಯದಲ್ಲಿ ಈ ಅರ್ಜಿ ಸಲ್ಲಿಸಲಾಗಿದೆ.
'ಪ್ರಕರಣಕ್ಕೆ ಸಂಬಂಧಿಸಿದಂತೆ 60 ದಿನಗಳಾದರೂ ಇನ್ನೂ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿಲ್ಲ. ಆದ್ದರಿಂದ, ಸಿಆರ್ಪಿಸಿ ಕಲಂ 167(2)ರ ಅಡಿಯಲ್ಲಿ ಆರೋಪಿಗೆ ಕಡ್ಡಾಯ ಜಾಮೀನು ಮಂಜೂರು ಮಾಡಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಇದಕ್ಕೆ ಪ್ರತಿಯಾಗಿ ಪ್ರಕರಣದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಎಂ.ಎಸ್.ಶ್ಯಾಮಸುಂದರ್, 'ದೋಷಾರೋಪಣೆ ಪಟ್ಟಿ ಸಲ್ಲಿಕೆಗೆ 90 ದಿನಗಳ ಕಾಲಾವಕಾಶ ಇದೆ. ಪ್ರಕರಣ ಗಂಭೀರ ಸ್ವರೂಪದ್ದಾಗಿದ್ದು, ತನಿಖಾಧಿಕಾರಿಗೆ ಇನ್ನೂ ಸಾಕಷ್ಟು ಸಮಯವಿದೆ' ಎಂದು ತಿಳಿಸಿದ್ದಾರೆ.