ಬೆಂಗಳೂರು (ಪಿಟಿಐ): ಬಿಜಿಪಿಯ ಹಿರಿಯ ಮುಖಂಡ ಎನ್. ಶಂಕರಪ್ಪ ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ನೀಡಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ವಿಧಾನ ಪರಿಷತ್ ಪ್ರವೇಶಿಸಲು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ.
ಶಂಕರಪ್ಪ ಅವರು ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರಿಗೆ ರಾಜೀನಾಮೆಯನ್ನು ಸಲ್ಲಿಸಿದ ನಂತರ ವರದಿಗಾರರೊಂದಿಗೆ ಮಾತನಾಡುತ್ತಾ, ~ನನ್ನ ರಾಜೀನಾಮೆಗೆ ಯಾರೂ ಒತ್ತಡ ಹೇರಿಲ್ಲ. ಪಕ್ಷದ ನಿರ್ದೇಶನದ ಮೇರೆಗೆ ನಾನು ರಾಜೀನಾಮೆಯನ್ನು ಸಲ್ಲಿಸಿರುತ್ತೇನೆ~ ಎಂದರು.
ಮುಖ್ಯಮಂತ್ರಿಯಾಗಿ ಆಯ್ಕೆಯಾದವರು, ತಾವು ಪ್ರಮಾಣ ವಚನ ಸ್ವೀಕರಿಸಿದ ದಿನದಿಂದ ಆರು ತಿಂಗಳ ಒಳಗೆ ಕಡ್ಡಾಯವಾಗಿ ರಾಜ್ಯದ ವಿಧಾನಸಭೆ ಅಥವಾ ವಿಧಾನ ಪರಿಷತ್ ನ ಸದಸ್ಯರಾಗಿ ಆಯ್ಕೆಯಾಗಬೇಕು.
ಈ ಮೊದಲು ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ ನಂತರ, ಅವರ ಸ್ಥಾನಕ್ಕೆ ಆಯ್ಕೆಯಾದ ಡಿ. ವಿ. ಸದಾನಂದ ಗೌಡ ಅವರು, ಈಗ ಮುಖ್ಯಮಂತ್ರಿಯಾಗಿ ಎರಡು ತಿಂಗಳ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.
ಕರ್ನಾಟಕ ಲೋಕಾಯುಕ್ತರು ರಾಜ್ಯದಲ್ಲಿ ನಡೆದ ಅಕ್ರಮ ಗಣಿಗಾರಿಕೆ ಕುರಿತು ಸಲ್ಲಿಸಿದ ವಿಸ್ತೃತ ವರದಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಿದ್ದರು. ಆ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕಾಯಿತು.