ಬೆಂಗಳೂರು: ಬೆಳಗಾವಿಯಲ್ಲಿ ಮಾರ್ಚ್ 11ರಿಂದ ನಡೆಯಲಿರುವ ವಿಶ್ವ ಕನ್ನಡ ಸಮ್ಮೇಳನದ ಕವಿ ಗೋಷ್ಠಿಯಲ್ಲಿ ಪಾಲ್ಗೊಳ್ಳಲು ಸಾಹಿತಿ ಪ್ರೊ. ಚಂದ್ರಶೇಖರ ಪಾಟೀಲ ನಿರಾಕರಿಸಿದ್ದಾರೆ.
ಶನಿವಾರ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು ರಾಜ್ಯಸಭೆ ಚುನಾವಣೆಯಲ್ಲಿ ಕನ್ನಡೇತರರನ್ನು ಅಭ್ಯರ್ಥಿ ಮಾಡಿರುವ ಬಿಜೆಪಿ ಸರ್ಕಾರ ವಿಶ್ವ ಕನ್ನಡ ಸಮ್ಮೇಳನ ಆಚರಿಸುವುದರಲ್ಲಿ ಯಾವುದೇ ಅರ್ಥ ಇಲ್ಲ. ಇದನ್ನು ಪ್ರತಿಭಟಿಸುವ ಉದ್ದೇಶದಿಂದಲೇ ಕವಿಗೋಷ್ಠಿಯ ಆಹ್ವಾನವನ್ನು ನಿರಾಕರಿಸಿದ್ದೇನೆ’ ಎಂದು ಹೇಳಿದರು.
‘ಎಲ್ಲಾ ಪಕ್ಷಗಳೂ ಇದೇ ರೀತಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿವೆ ಎಂದು ಬಿಜೆಪಿ ಸಮರ್ಥಿಸಿಕೊಳ್ಳಬಹುದು. ಆದರೆ ಹಿಂದಿನವರು ಮಾಡಿದ ತಪ್ಪನ್ನು ಪುನರಾವರ್ತಿಸಬಾರದು ಎಂಬ ಕಾಳಜಿ ಆಡಳಿತದಲ್ಲಿರುವವರಿಗೆ ಇರಬೇಕು’ ಎಂದು ಅವರು ತಿಳಿಸಿದರು. ‘ಮೊದಲನೇ ತರಗತಿಯಿಂದಲೇ ಇಂಗ್ಲಿಷ್ ಮಾಧ್ಯಮವನ್ನು ಪ್ರತಿನಿಧಿಸುವ ಇಂಗ್ಲಿಷ್ ಪ್ರೇಮಿ ಇನ್ಫೋಸಿಸ್ ನಾರಾಯಣ ಮೂರ್ತಿ ಅವರನ್ನು ಸಮ್ಮೇಳನದ ಉದ್ಘಾಟನೆಗೆ ಆಹ್ವಾನಿಸಿರುವುದು ಹಾಸ್ಯಾಸ್ಪದ’ ಎಂದು ಅವರು ಟೀಕಿಸಿದರು.