ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಯಲ್ಲಿ ಇದ್ದ ತೊಡಕು ನಿವಾರಿಸಿ, ಶಿಕ್ಷಕ ಸಮೂಹಕ್ಕೆ ಅನುಕೂಲ ಕಲ್ಪಿಸಲು ಸರ್ಕಾರ ಮುಂದಾಗಿದೆ.
2007ರ ಶಿಕ್ಷಕರ ವರ್ಗಾವಣೆ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ತರಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ. ಇದೇ 28ರವರೆಗೆ ನಡೆಯಲಿರುವ ಅಧಿವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡಿಸಲಾಗುವುದು. ಹೊಸ ಕಾಯ್ದೆ ಅನ್ವಯ ಈ ವರ್ಷ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಉದ್ದೇಶಿತ ಮಸೂದೆಯು ಪತಿ–ಪತ್ನಿ ಪ್ರಕರಣ, ಅಂಗವಿಕಲರು ಮತ್ತು ತೀವ್ರ ಆರೋಗ್ಯ ಸಮಸ್ಯೆ ಇರುವವರು, ಶಿಕ್ಷಕರ ಅಥವಾ ನೌಕರರ ಸಂಘದ ಪದಾಧಿಕಾರಿಗಳನ್ನು ವರ್ಗಾವಣೆ ಮಾಡುವುದಕ್ಕೆ ಅಥವಾ ಮಾಡದೇ ಇರುವುದಕ್ಕೆ ವಿಶೇಷ ಅವಕಾಶಗಳನ್ನು ಕಲ್ಪಿಸಲಿದೆ. ಶಿಕ್ಷಕರ ಒಟ್ಟು ಬಲದ ಶೇ15ರಷ್ಟು ನೌಕರರನ್ನು ಮಾತ್ರ ಒಂದು ಶೈಕ್ಷಣಿಕ ವರ್ಷದಲ್ಲಿ ವರ್ಗಾವಣೆ ಮಾಡಲು ಮಸೂದೆ ಅವಕಾಶ ಕಲ್ಪಿಸಲಿದೆ.
ಪರಿಣಾಮಗಳೇನು?
* 10 ವರ್ಷ ‘ಎ’ ಮತ್ತು ‘ಬಿ’ ವಲಯದಲ್ಲಿ ಕೆಲಸ ಮಾಡಿದ ಶಿಕ್ಷಕರು ಗ್ರಾಮೀಣ ಪ್ರದೇಶದ ಸೇವೆ ಮಾಡುವುದು ಕಡ್ಡಾಯವಾಗಲಿದೆ.
* ಬೆಂಗಳೂರು ಸೇರಿದಂತೆ ವಿವಿಧ ನಗರ ಪಾಲಿಕೆ, ನಗರಸಭೆ, ಜಿಲ್ಲಾ ಕೇಂದ್ರಗಳಲ್ಲಿ 10 ವರ್ಷ ಸೇವೆ ಸಲ್ಲಿಸಿದವರನ್ನು ನೂತನ ನಿಯಮಗಳ ಪ್ರಕಾರ ಗ್ರಾಮೀಣ ಪ್ರದೇಶಕ್ಕೆ ವರ್ಗಾವಣೆ ಮಾಡಲಾಗುತ್ತದೆ.