ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೆ, ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ.
ವಿದ್ಯುತ್ ದರ ಏರಿಸುವಂತೆ ವಿದ್ಯುತ್ ಸರಬರಾಜು ಕಂಪನಿಗಳು (ಎಸ್ಕಾಂ) ಮನವಿ ಸಲ್ಲಿಸಿವೆ. ಆದರೆ, ಈ ನಿಟ್ಟಿನಲ್ಲಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ಸಿ) ಇನ್ನೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ.
‘ವಿದ್ಯುತ್ ದರ ಪರಿಷ್ಕರಣೆ ಖಚಿತವಾಗಿದ್ದು, ಚುನಾವಣಾ ನೀತಿ ಸಂಹಿತೆ ಮುಕ್ತಾಯಗೊಂಡ ಬಳಿಕ ಘೋಷಣೆಯಾಗಲಿದೆ. ಪರಿಷ್ಕೃತ ದರ ಏಪ್ರಿಲ್ 1ರಿಂದಲೇ ಪೂರ್ವಾನ್ವಯ ಆಗಲಿದೆ’ ಎಂದು ಕೆಇಆರ್ಸಿ ಮೂಲಗಳು ತಿಳಿಸಿವೆ.
ವಿದ್ಯುತ್ ದರ ಹೆಚ್ಚಳ ಮಾಡುವಂತೆ 2018 ನವೆಂಬರ್ನಲ್ಲೇ ಎಲ್ಲ ಎಸ್ಕಾಂಗಳು ಕೆಇಆರ್ಸಿಗೆ ಪ್ರಸ್ತಾವ ಸಲ್ಲಿಸಿದ್ದವು. ಆದರೆ, ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಕಾರಣಕ್ಕೆ ದರ ಪರಿಷ್ಕರಿಸಲು ಕೆಇಆರ್ಸಿ ಮುಂದಾಗಿರಲಿಲ್ಲ.