ಬೇಲೂರು: ಚಿಕ್ಕಮಗಳೂರಿನ ಬಾಬಾಬುಡನ್ ದತ್ತಪೀಠದಲ್ಲಿ ನಡೆಯುವ ದತ್ತಮಾಲಾ ಅಭಿಯಾನಕ್ಕೂ ಮುನ್ನ ವಿವಿಧೆಡೆಗಳಿಂದ ಆಗಮಿಸಿದ್ದ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪಟ್ಟಣದಲ್ಲಿ ಸೋಮವಾರ ಶೋಭಾಯಾತ್ರೆ ನಡೆಸುವ ಸಂದರ್ಭದಲ್ಲಿ ಮತ್ತೊಂದು ಕೋಮಿನ ಜನರ ನಡುವೆ ಪರಸ್ಪರ ಕಲ್ಲು ತೂರಾಟ ನಡೆದು, ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿತ್ತು.
ಉದ್ವಿಗ್ನ ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.
ಮಡಿಕೇರಿ, ಸೋಮವಾರಪೇಟೆ, ಸಕಲೇಶಪುರ ಸೇರಿದಂತೆ ವಿವಿಧೆಡೆಗಳಿಂದ 30ಕ್ಕೂ ಹೆಚ್ಚು ವಾಹನಗಳಲ್ಲಿ ಬಂದಿದ್ದ ಸಾವಿರಕ್ಕೂ ಹೆಚ್ಚು ಹಿಂದೂ ಸಂಘಟನೆಗಳ ಕಾರ್ಯಕರ್ತರು ಬೆಳಿಗ್ಗೆ 11ಗಂಟೆ ಸಮಯದಲ್ಲಿ ಚಿಕ್ಕಮಗಳೂರಿಗೆ ತೆರಳುವ ಮುನ್ನ ಪಟ್ಟಣದಲ್ಲಿ ಶೋಭಾಯಾತ್ರೆ ನಡೆಸಿದರು.
ಪಟ್ಟಣದ ಮೀನು ಮಾರುಕಟ್ಟೆ ಬಳಿ ಕಲ್ಲು ತೂರಾಟ ನಡೆದು ಕೆಲಕಾಲ ಉದ್ವಿಗ್ನ ವಾತಾವರಣ ಉಂಟಾಯಿತು. ಈ ಸಂದರ್ಭದಲ್ಲಿ ಪೊಲೀಸರು ದತ್ತಮಾಲಾಧಾರಿಗಳು ಹಾಗೂ ಮತ್ತೊಂದು ಕೋಮಿನ ಯುವಕರನ್ನು ಸಮಾಧಾನಗೊಳಿಸಲು ಹರಸಾಹಸ ಪಡಬೇಕಾಯಿತು. ಕೊನೆಗೆ ಸ್ಥಳಕ್ಕೆ ಬಂದ ಸರ್ಕಲ್ ಇನ್ಸ್ಪೆಕ್ಟರ್ ಕೆ.ಎಲ್. ಗಣೇಶ್ ಪರಿಸ್ಥಿತಿಯನ್ನು ತಿಳಿಗೊಳಿಸಿದರು.
ಇದಕ್ಕೂ ಮುನ್ನ ಬೆಳಿಗ್ಗೆ 9.30ರ ಸಮಯದಲ್ಲಿ ಅರೇಹಳ್ಳಿಯಲ್ಲಿ ನಡೆದ ಶೋಭಾಯಾತ್ರೆ ಸಂದರ್ಭದಲ್ಲೂ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಅರೇಹಳ್ಳಿ ಮತ್ತು ಬೇಲೂರಿನಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಶೋಭಾಯಾತ್ರೆ ನಡೆಸುವ ಸಂದರ್ಭದಲ್ಲಿ ಮತ್ತೊಂದು ಕೋಮಿನ ಜನರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದೇ ಈ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ.
ಘಟನೆಯ ಬಳಿಕ ಸ್ಥಳಕ್ಕೆ ಬಂದ ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ರಶ್ಮಿ, ಪಟ್ಟಣದ ವಿವಿಧ ಭಾಗಗಳಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಕೈಗೊಂಡರು. ಚಿಕ್ಕಮಗಳೂರಿಗೆ ತೆರಳಿದ್ದ ಬಜರಂಗದಳ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರ ವಾಹನಗಳು ಬೇಲೂರು ಮತ್ತು ಅರೇಹಳ್ಳಿ ಮಾರ್ಗವಾಗಿ ಸಂಚರಿಸಲು ಅವಕಾಶ ನೀಡದೆ, ಹಾಸನ ಹಾಗೂ ಮೂಡಿಗೆರೆ ಮೂಲಕ ತೆರಳುವಂತೆ ನೋಡಿಕೊಂಡರು.
ಮುನ್ನೆಚ್ಚರಿಕೆ ಕ್ರಮವಾಗಿ ಬೇಲೂರು ಹಾಗೂ ಅರೇಹಳ್ಳಿ ಪಟ್ಟಣದಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.