ಬೆಂಗಳೂರು: ಸಂಪುಟದಲ್ಲಿ ಸ್ಥಾನ ದೊರೆಯದ ಕಾಂಗ್ರೆಸ್ನ ಅತೃಪ್ತ ಶಾಸಕರು ಭಾನುವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅವರನ್ನು ಭೇಟಿ ಮಾಡಿ ನೇರವಾಗಿ ಅಸಮಾಧಾನ ಹೊರಹಾಕಿದ್ದು, ಲೋಕಸಭಾ ಚುನಾವಣೆಗೂ ಮುನ್ನವೇ ಇನ್ನೊಂದು ಸುತ್ತಿನ ಸಂಪುಟ ವಿಸ್ತರಣೆ ಮಾಡುವಂತೆ ಒತ್ತಡ ಹೇರಿದ್ದಾರೆ.
ರಾಜ್ಯ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆಗಾಗಿ ಭಾನುವಾರವೇ ನಗರಕ್ಕೆ ಬಂದಿರುವ ದಿಗ್ವಿಜಯ್ ಸಿಂಗ್ ಅವರು, ಕುಮಾರಕೃಪಾ ಅತಿಥಿಗೃಹದಲ್ಲಿ ತಂಗಿದ್ದಾರೆ. ಅಲ್ಲಿಗೇ ತೆರಳಿ ದಿಗ್ವಿಜಯ್ ಅವರನ್ನು ಭೇಟಿಮಾಡಿದ ಶಾಸಕರಾದ ಕೆ.ಬಿ.ಕೋಳಿವಾಡ, ಡಾ.ಎ.ಬಿ.ಮಾಲಕರೆಡ್ಡಿ, ಮಾಲೀಕಯ್ಯ ಗುತ್ತೇದಾರ್, ಸಿದ್ದು ನ್ಯಾಮಗೌಡ, ಶಿವಾನಂದ ಪಾಟೀಲ ಮತ್ತಿತರರು ಸಚಿವ ಸ್ಥಾನ ನೀಡದಿರುವುದಕ್ಕೆ ಅಸಮಾಧಾನ ಹೊರಹಾಕಿದ್ದಾರೆ. ಮಧುಗಿರಿ ಶಾಸಕ ಕೆ.ಎನ್.ರಾಜಣ್ಣ ಸೇರಿದಂತೆ ಕೆಲವರು ಸೋಮವಾರ ಭೇಟಿಮಾಡಲು ಸಮಯ ಕೇಳಿದ್ದಾರೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕನನ್ನು ಭೇಟಿಯಾದ ಎಲ್ಲ ಶಾಸಕರೂ, ತಮಗೆ ಹಿರಿತನಕ್ಕೆ ತಕ್ಕ ಮಾನ್ಯತೆ ದೊರೆತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಸಂಪುಟ ರಚನೆಯಲ್ಲಿ ಜಿಲ್ಲೆ, ಜಾತಿ ಮತ್ತು ಹಿರಿತನ ಆಧರಿಸಿ ಪ್ರಾತಿನಿಧ್ಯ ನೀಡದಿರುವ ಮೂಲಕ ತಮಗೆ ಅನ್ಯಾಯ ಮಾಡಲಾಗಿದೆ ಎಂದು ದೂರಿದ್ದಾರೆ. ಲೋಕಸಭಾ ಚುನಾವಣೆಗೂ ಮುನ್ನವೇ ತಮಗೆ ಸಂಪುಟದಲ್ಲಿ ಸ್ಥಾನ ನೀಡದಿದ್ದರೆ ವ್ಯತಿರಿಕ್ತ ಪರಿಣಾಮಗಳನ್ನು ಎದುರಿಸಬೇಕಾಗಬಹುದು ಎಂದು ಕೆಲವರು ಬೆದರಿಕೆಯ ಧಾಟಿಯಲ್ಲೂ ಮಾತನಾಡಿದ್ದಾರೆ.
ಸಂಪುಟದಲ್ಲಿ ಮೂರು ಸ್ಥಾನ ಮಾತ್ರ ಖಾಲಿ ಇರುವುದರಿಂದ ಎಲ್ಲರಿಗೂ ಏಕಕಾಲಕ್ಕೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಅತೃಪ್ತ ಶಾಸಕರಿಗೆ ಮನವರಿಕೆ ಮಾಡಲು ದಿಗ್ವಿಜಯ್ ಪ್ರಯತ್ನಿಸಿದ್ದಾರೆ. ಆದರೆ, ಮೂರು ಸಚಿವ ಸ್ಥಾನ ತುಂಬುವ ಜೊತೆ ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಹುದ್ದೆ, ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ, ಮುಖ್ಯಮಂತ್ರಿ ಸಂಸದೀಯ ಕಾರ್ಯದರ್ಶಿ ಮತ್ತು ರಾಜಕೀಯ ಕಾರ್ಯದರ್ಶಿ ಹುದ್ದೆಗಳಿಗೆ ನೇಮಕ ಮಾಡುವ ಮೂಲಕ ಹಿರಿಯರಿಗೆ ಸ್ಥಾನಮಾನ ಕಲ್ಪಿಸಿ ಎಂಬುದಾಗಿ ಈ ಶಾಸಕರು ಒತ್ತಾಯಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಚುನಾವಣೆಯೊಳಗೆ...:‘ಸ್ಪೀಕರ್ ಕಾಗೋಡು ತಿಮ್ಮಪ್ಪ ಮತ್ತು ನಾನು ಒಂದೇ ಅವಧಿಯಲ್ಲಿ ವಿಧಾನಸಭೆ ಪ್ರವೇಶಿಸಿದವರು. ನಾನು ಈಗ ವಿಧಾನಸಭೆಯ ಅತ್ಯಂತ ಹಿರಿಯ ಸದಸ್ಯ. ಹಾವೇರಿ ಜಿಲ್ಲೆಗೂ ಸಂಪುಟದಲ್ಲಿ ಪ್ರಾತಿನಿಧ್ಯ ದೊರೆತಿಲ್ಲ. ಲೋಕಸಭಾ ಚುನಾವಣೆಗೂ ಮುನ್ನ ಸಂಪುಟದಲ್ಲಿ ಸ್ಥಾನ ನೀಡದಿದ್ದರೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂದು ನೇರವಾಗಿ ಅವರಿಗೆ ಹೇಳಿದ್ದೇನೆ’ ಎಂದು ಕೆ.ಬಿ.ಕೋಳಿವಾಡ ‘ಪ್ರಜಾವಾಣಿ’ಗೆ ತಿಳಿಸಿದರು.
ಉತ್ತರ ಕರ್ನಾಟಕಕ್ಕೆ ಅನ್ಯಾಯ
ದಿಗ್ವಿಜಯ್ ಸಿಂಗ್ ಭೇಟಿಯ ಬಳಿಕ ‘ಪ್ರಜಾವಾಣಿ’ ಜೊತೆ ಮಾತನಾಡಿದ ಮಾಲಕರೆಡ್ಡಿ, ‘ಸಂಪುಟ ರಚನೆಯಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ. ದೀರ್ಘಕಾಲ ಪಕ್ಷಕ್ಕಾಗಿ ದುಡಿದ ನಮ್ಮನ್ನು ಗೌರವದಿಂದ ನಡೆಸಿಕೊಳ್ಳುತ್ತಿಲ್ಲ. ಇದರಿಂದ ಉತ್ತರ ಕರ್ನಾಟಕದ ಜನರಿಗೂ ನೋವಾಗಿದೆ’ ಎಂದರು.
‘ಉತ್ತರ ಕರ್ನಾಟಕದಲ್ಲಿ 2004ರಲ್ಲಿ ಕಾಂಗ್ರೆಸ್ನ 24 ಶಾಸಕರು ಇದ್ದರು. 2008ರಲ್ಲಿ ಈ ಸಂಖ್ಯೆ 27 ಇತ್ತು. ಆದರೆ, ಕಳೆದ ಚುನಾವಣೆಯಲ್ಲಿ 58 ಶಾಸಕರು ಆರಿಸಿ ಬಂದಿದ್ದೇವೆ. 12 ಮಂದಿಗೆ ಮಾತ್ರ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ. ದಕ್ಷಿಣ ಕರ್ನಾಟಕದಲ್ಲಿ ಮುಖ್ಯಮಂತ್ರಿಯೂ ಸೇರಿದಂತೆ 19 ಜನರು ಸಂಪುಟದಲ್ಲಿದ್ದಾರೆ. ಈ ಅಸಮತೋಲನ ಸರಿಪಡಿಸಲು ಖಾಲಿ ಇರುವ ಮೂರು ಸ್ಥಾನಗಳನ್ನೂ ಉತ್ತರ ಕರ್ನಾಟಕದ ಹಿರಿಯ ಶಾಸಕರಿಗೆ ನೀಡುವಂತೆ ಮನವಿ ಮಾಡಿದ್ದೇನೆ’ ಎಂದು ಹೇಳಿದರು.
‘ನಾನು ಆರನೇ ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಹಿರಿತನ ಇದ್ದರೂ ಸಚಿವ ಸ್ಥಾನ ದೊರಕಿಲ್ಲ. ಉತ್ತರ ಕರ್ನಾಟಕದ ಜನರ ಸಮಸ್ಯೆಗಳಿಗೆ ಸ್ಪಂದಿಸಲು ನನಗೆ ಸಂಪುಟದಲ್ಲಿ ಸ್ಥಾನ ನೀಡಲೇಬೇಕು. ನಿಮ್ಮಿಂದ ನಮಗೆ ನ್ಯಾಯ ದೊರಕಿಸಲು ಸಾಧ್ಯವೇ ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಈ ಎಲ್ಲ ವಿಷಯಗಳನ್ನೂ ದಿಗ್ವಿಜಯ್ ಸಿಂಗ್ ಅವರ ಗಮನಕ್ಕೆ ತಂದಿದ್ದೇವೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದು ಮಾಲೀಕಯ್ಯ ಗುತ್ತೇದಾರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.