ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮೂಹಿಕ ನಾಯಕತ್ವಕ್ಕೆ ಗಡ್ಕರಿ ಸಲಹೆ

Last Updated 6 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕೊಪ್ಪಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸಾಮೂಹಿಕ ನಾಯಕತ್ವದಡಿಯೇ ಹೋಗುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ರಾಜ್ಯದ ಮುಖಂಡರಿಗೆ ಸಲಹೆ ಮಾಡಿದ್ದಾರೆ.
ಗಡ್ಕರಿ ಜತೆ ಚರ್ಚಿಸಲು ನಾಗಪುರಕ್ಕೆ ಮಂಗಳವಾರ ತೆರಳಿದ್ದ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಇತರರಿಗೆ ಈ ಸಲಹೆ ನೀಡಿದ್ದಾರೆ ಎಂದು ಗೊತ್ತಾಗಿದೆ.

ಸಂಜೆ ನಗರಕ್ಕೆ ವಾಪಸಾದ ನಂತರ ಸುದ್ದಿಗಾರರ ಜತೆ ಮಾತನಾಡಿದ ಸದಾನಂದ ಗೌಡ ಅವರು ಎಲ್ಲರೂ ಒಟ್ಟಿಗೇ ಹೋಗಲು ವರಿಷ್ಠರು ಸಲಹೆ ನೀಡಿದ್ದು, ಆ ಪ್ರಕಾರ ನಡೆದುಕೊಳ್ಳುವುದಾಗಿ ಹೇಳಿದರು. ಯಡಿಯೂರಪ್ಪ ನೇತೃತ್ವದಲ್ಲೇ ಚುನಾವಣೆ ಎದುರಿಸಬೇಕೆಂದು ಅವರ ಬೆಂಬಲಿಗ ಕೆಲ ಸಚಿವರು ಇತ್ತೀಚೆಗೆ ನಾಗಪುರಕ್ಕೆ ತೆರಳಿ ಗಡ್ಕರಿ ಅವರಿಗೆ ಮನವಿ ಮಾಡಿದ್ದರು.

ಈ ವಿಷಯದಲ್ಲಿ ಮುಖಂಡರಲ್ಲಿಯೂ ಗೊಂದಲ ಉಂಟಾಗಿತ್ತು. ಕೊನೆಗೆ ಮುಖ್ಯಮಂತ್ರಿ ಸದಾನಂದ ಗೌಡ ಅವರು ಗಡ್ಕರಿ ಅವರನ್ನು ಭೇಟಿ ಮಾಡಿಯೇ ಈ ವಿವಾದ ಬಗೆಹರಿಸಿಕೊಳ್ಳಲು ನಿರ್ಧರಿಸಿ, ನಾಗಪುರಕ್ಕೆ ತೆರಳಿದರು. ಜ್ವರದ ಕಾರಣ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ನಾಗಪುರಕ್ಕೆ ಹೋಗಲಿಲ್ಲ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮುಖಂಡರಾದ ಸಂತೋಷ್, ಸತೀಶ್ ತೆರಳಿದ್ದರು.
`ಒಬ್ಬರ ನೇತೃತ್ವದಲ್ಲಿ ಚುನಾವಣೆಗೆ ಹೋಗುವುದು ಬೇಡ. ಎಲ್ಲರೂ ಒಗ್ಗಟ್ಟಾಗಿ ಚುನಾವಣೆ ಎದುರಿಸಿ~ ಎನ್ನುವ ಸಲಹೆಯನ್ನು ಗಡ್ಕರಿ ನೀಡಿದರು. ಇದೇ ವೇಳೆ ಯಡಿಯೂರಪ್ಪ ಅವರನ್ನು ಕಡೆಗಣಿಸುವಂತಿಲ್ಲ.
ಅವರನ್ನೂ ಜತೆಗೆ ಕರೆದೊಯ್ಯಬೇಕೆನ್ನುವ ಸಲಹೆಯನ್ನೂ ಅವರು ನೀಡಿದ್ದಾರೆ ಎಂದು ಗೊತ್ತಾಗಿದೆ.

ಯಡಿಯೂರಪ್ಪ ಮನವಿ: `ಸುಳ್ಳು ಆರೋಪಗಳ ಹಿನ್ನೆಲೆಯಲ್ಲಿ ನಾನು ಅಗ್ನಿಪರೀಕ್ಷೆ ಎದುರಿಸುತ್ತಿದ್ದು, ಕೊಪ್ಪಳ ಚುನಾವಣೆ ನನ್ನ ನೇತೃತ್ವದಲ್ಲೇ ನಡೆಯಲಿ~ ಎಂದು ಯಡಿಯೂರಪ್ಪ ಮನವಿ ಮಾಡಿದರು ಎನ್ನಲಾಗಿದೆ.
`ಬಳ್ಳಾರಿಯ ಶ್ರೀರಾಮುಲು ಸೇರಿದಂತೆ ಯಾರೇ ಚುನಾವಣೆಗೆ ಸ್ಪರ್ಧಿಸಿದರೂ ನಾನು ಸಮರ್ಥವಾಗಿ ಅದನ್ನು ಎದುರಿಸಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇನೆ.

ಹೀಗಾಗಿ ನನ್ನ ನೇತೃತ್ವದಲ್ಲೇ ಚುನಾವಣೆ ನಡೆಯಲಿ~ ಎನ್ನುವ ಮನವಿ ಮಾಡಿದರು ಎನ್ನಲಾಗಿದೆ. ಸದ್ಯದಲ್ಲೇ ಎಲ್ಲ ಆರೋಪಗಳಿಂದ ಮುಕ್ತವಾಗುವ ವಿಶ್ವಾಸ ಇದ್ದು, ಮುಂದಿನ ಸಾರ್ವತ್ರಿಕ ಚುನಾವಣೆ ಕೂಡ ತಮ್ಮ ನೇತೃತ್ವದಲ್ಲೇ ನಡೆಯಲಿ ಎನ್ನುವ ಮನವಿಯನ್ನೂ ಮಾಡಿದರು ಎಂದು ಗೊತ್ತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT