ಬೆಂಗಳೂರು: `ಈ ವರ್ಷ ನಂದಿನಿ ಹಾಲಿನ ದರ ಹೆಚ್ಚಳ ಮಾಡುವುದಿಲ್ಲ' ಎಂದು ಕೆಎಂಎಫ್ ಅಧ್ಯಕ್ಷ ಜಿ.ಸೋಮಶೇಖರ ರೆಡ್ಡಿ ಪ್ರಕಟಿಸಿದರು.
ನಗರದಲ್ಲಿ ಶನಿವಾರ ಆಯೋಜಿಸಿದ್ದ ವಿಶ್ವ ಹಾಲು ದಿನಾಚರಣೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, `ಚಿಲ್ಲರೆ ಸಮಸ್ಯೆ ನೀಗಿಸಲು ಹಾಲಿನ ಪ್ರಮಾಣ ಸ್ವಲ್ಪ ಹೆಚ್ಚು ಮಾಡಿ ದರವನ್ನು ಜೂನ್ 1ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾಗಿದೆ. ಈ ವರ್ಷ ಮತ್ತೆ ದರ ಹೆಚ್ಚಳ ಮಾಡುವುದಿಲ್ಲ' ಎಂದರು.
`ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ರ್ಯಾಂಕ್ ಹಾಗೂ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಪೂರ್ಣಗೊಳ್ಳುವವರೆಗೆ ಪ್ರತಿದಿನ ಒಂದು ಲೀಟರ್ ಹಾಲನ್ನು ಉಚಿತವಾಗಿ ನೀಡಲಾಗುವುದು. ಈ ಯೋಜನೆ ಈ ವರ್ಷಕ್ಕೆ ಸೀಮಿತ ಅಲ್ಲ' ಎಂದು ಸ್ಪಷ್ಟಪಡಿಸಿದರು.