ಕರಾಚಿ: ಪಾಕಿಸ್ತಾನದ ಕ್ವೆಟ್ಟಾದಲ್ಲಿರುವ ಹಣ್ಣಿನ ಮಾರುಕಟ್ಟೆಯಲ್ಲಿ ಶುಕ್ರವಾರ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 20 ಜನರು ಮೃತಪಟ್ಟಿದ್ದಾರೆ. ಶಿಯಾ ಹಜಾರ ಜನಾಂಗೀಯ ಅಲ್ಪಸಂಖ್ಯಾತ ಸಮುದಾಯದವರನ್ನು ಗುರಿಯಾಗಿಸಿಕೊಂಡು ಸ್ಫೋಟ ನಡೆಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ತರಕಾರಿಗಳ ನಡುವೆಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಅಡಗಿಸಿಟ್ಟು ಸ್ಫೋಟಿಸಲಾಗಿದೆ. ಘಟನೆಯಲ್ಲಿ 48 ಮಂದಿ ಗಾಯಗೊಂಡಿದ್ದಾರೆ.
ಕ್ವೆಟ್ಟಾ ದಾಳಿಯಲ್ಲಿ ಸಾವಿಗೀಡಾದವರಲ್ಲಿ 8 ಮಂದಿ ಹಜಾರ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭದ್ರತಾ ಪಡೆಗಳು ಆತಂಕ ವ್ಯಕ್ತಪಡಿಸಿರುವುದಾಗಿ ‘ಜಿಯೊ ನ್ಯೂಸ್’ ವರದಿ ಮಾಡಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ತೀವ್ರತೆಗೆ ಹತ್ತಿರದ ಕಟ್ಟಡಗಳಿಗೂ ಹಾನಿಯಾಗಿದೆ.ಯಾವುದೇ ಸಂಘಟನೆ ಸ್ಫೋಟದ ಹೊಣೆ ಹೊತ್ತುಕೊಂಡಿಲ್ಲ.
ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಘಟನೆ ಸಂಬಂಧ ವರದಿ ಕೇಳಿದ್ದಾರೆ. ಶಿಯಾ ಹಜಾರ ಪಾಕಿಸ್ತಾನದ ಪ್ರಮುಖ ಅಲ್ಪಸಂಖ್ಯಾತ ಸಮುದಾಯವಾಗಿದೆ. ಬಹುತೇಕರು ಕ್ವೆಟ್ಟಾ ಪ್ರದೇಶದಲ್ಲಿಯೇ ವಾಸಿಸುತ್ತಿದ್ದಾರೆ.