ಪುಲ್ವಾಮಾದಲ್ಲಿ 40 ಯೋಧರ ಸಾವಿಗೆ ಕಾರಣವಾದ ಉಗ್ರನ ಆತ್ಮಾಹುತಿ ದಾಳಿಯಾಗಿ 12 ದಿನಗಳ ನಂತರ ಉಗ್ರರ ಶಿಬಿರಗಳ ಮೇಲೆ ಭಾರತ ನಡೆಸಿದ ವೈಮಾನಿಕ ದಾಳಿ; ಬೆನ್ನಲೇ ಪಾಕಿಸ್ತಾನ ವಾಯುಪಡೆ ಯುದ್ಧ ವಿಮಾನಗಳು ಭಾರತದ ಗಡಿ ಪ್ರವೇಶಿಸಿ ದಾಳಿ ನಡೆಸುವ ಪ್ರಯತ್ನ ಮಾಡಿದ್ದು, ಪಾಕಿಸ್ತಾನದ ಎಫ್–16 ವಿಮಾನವನ್ನು ಹೊಡೆದುರುಳಿಸಿದ ಮಿಗ್–21 ವಿಮಾನದ ಪೈಲಟ್, ವಿಂಗ್ ಕಮಾಂಡರ್ ಅಭಿನಂದನ್ ಪಾಕಿಸ್ತಾನ ಸೇನೆಯ ವಶದಲ್ಲಿದ್ದರು. ಅಂತರರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ಸೃಷ್ಟಿಯಾಗುತ್ತಿದ್ದಂತೆ ಪಾಕಿಸ್ತಾನ ಅಭಿನಂದನ್ ಅವರನ್ನು ಬಿಡುಗಡೆ ಮಾಡಿತ್ತು. ಈ ಎಲ್ಲ ಘಟನೆಗಳೊಂದಿಗೆ ಭಾರತ–ಪಾಕಿಸ್ತಾನ ನಡುವಿನ ಸಂಬಂಧ ಬೂದಿ ಮುಚ್ಚಿದ ಕೆಂಡದಂತಾಗಿದೆ.