ಮ್ಯೂನಿಚ್ (ಪಿಟಿಐ): ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಕೆನಡಾದ ವಿದೇಶಾಂಗ ಸಚಿವೆ ಮೆಲಾನಿ ಜೊಲಿ ಅವರನ್ನು ಭೇಟಿಯಾಗಿ, ಪ್ರಚಲಿತ ವಿದ್ಯಮಾನ ಮತ್ತು ದ್ವಿಪಕ್ಷೀಯ ಬಾಂಧವ್ಯ ಕುರಿತು ಚರ್ಚಿಸಿದ್ದಾರೆ.
ಕೆನಡಾದಲ್ಲಿ ಸಿಖ್ ಪ್ರತ್ಯೇಕತಾವಾದಿ ಹತ್ಯೆ ಕುರಿತು ಉಭಯ ರಾಷ್ಟ್ರಗಳ ನಡುವೆ ರಾಜತಾಂತ್ರಿಕ ಭಿನ್ನಾಭಿಪ್ರಾಯ ಮೂಡಿರುವ ಸಂದರ್ಭದಲ್ಲಿಯೇ ಈ ಬೆಳವಣಿಗೆ ನಡೆದಿದೆ.
ಜರ್ಮನಿಯಲ್ಲಿ ಆಯೋಜನೆಗೊಂಡಿರುವ ಮ್ಯೂನಿಚ್ ಭದ್ರತಾ ಸಮ್ಮೇಳನದಲ್ಲಿ ಭಾಗಿಯಾಗಿದ್ದ ಸಂದರ್ಭದಲ್ಲಿ ಶುಕ್ರವಾರ ಈ ಇಬ್ಬರೂ ಮುಖಂಡರು ಭೇಟಿಯಾಗಿ ಚರ್ಚಿಸಿದರು.
ಈ ಭೇಟಿ ಕುರಿತಂತೆ ಉಭಯ ನಾಯಕರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಜೂನ್ 18ರಂದು ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿ ನಡೆದಿದ್ದ ನಿಜ್ಜಾರ್ ಹತ್ಯೆಯಲ್ಲಿ ಭಾರತೀಯ ಏಜೆಂಟ್ ಪಾತ್ರವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡಿಯು ಆರೋಪಿಸಿದ್ದರು. ಭಾರತ ಸರ್ಕಾರ ಇದನ್ನು ಸ್ಪಷ್ಟವಾಗಿ ತಳ್ಳಿಹಾಕಿತ್ತು.