ಕಠ್ಮಂಡು: ನೇಪಾಳದ ದಕ್ಷಿಣ ಭಾಗದಲ್ಲಿ ಭಾನುವಾರ ಮಳೆ ಹಾಗೂ ಬಿರುಗಾಳಿಗೆ ಸಿಲುಕಿ 29 ಮಂದಿ ಸಾವನ್ನಪ್ಪಿದ್ದು, 600 ಮಂದಿ ಗಾಯಗೊಂಡಿದ್ದಾರೆ. ಹಲವು ವಾಹನಗಳು ಜಖಂಗೊಂಡಿದ್ದು, ಮರ ಹಾಗೂ ವಿದ್ಯುತ್ ಕಂಬಗಳು ಧರೆಗೆ ಉರುಳಿವೆ.
ಬಾರಾ ಹಾಗೂ ಪಾರ್ಸಾ ಜಿಲ್ಲೆಯಲ್ಲಿ ಭಾನುವಾರ ರಾತ್ರಿಯಿಂದಲೇ ಬಿರುಗಾಳಿ ಆರಂಭವಾಗಿದ್ದು, ಬಾರಾ ಜಿಲ್ಲೆಯೊಂದರಲ್ಲೇ 26 ಮಂದಿ ಸಾವನ್ನಪ್ಪಿದ್ದಾರೆ. ಪಾರ್ಸಾ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ.
ಹೆದ್ದಾರಿಯಲ್ಲಿ ಬಿರುಗಾಳಿಗೆ ಕಾರು ಸಿಲುಕಿದ ಪರಿಣಾಮ ಅದರಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ.
ಹಲವು ಮನೆಗಳು ಕುಸಿದು ಬಿದ್ದು, ಅಪಾರ ಹಾನಿಯಾಗಿದೆ.
ಬಿರುಗಾಳಿಗೆ ಸಿಲುಕಿ 600 ಮಂದಿ ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ತುರ್ತು ಕಾರ್ಯಾಚರಣೆ ಕೇಂದ್ರ ಮಾಹಿತಿ ನೀಡಿದ್ದು, ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಆರೋಗ್ಯ ಕೇಂದ್ರ ಸ್ಥಾಪಿಸಲಾಗಿದೆ ಎಂದು ತಿಳಿಸಿದೆ.
ಪ್ರವಾಹದಲ್ಲಿ ಸಿಲುಕಿದ ಜನರ ರಕ್ಷಣೆ ಹಾಗೂ ಆಹಾರ ಸರಬರಾಜು ವ್ಯವಸ್ಥೆ ಕಲ್ಪಿಸಲು ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ. ಗಾಯಗೊಂಡವರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಪಾರ್ಸಾ ಜಿಲ್ಲಾಡಳಿತ ಹೇಳಿದೆ.
ಪ್ರಧಾನಿ ಕೆ.ಪಿ.ಶರ್ಮಾ ಒಲಿ ಅವರು ಪ್ರವಾಹ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.