ಕೊಲಂಬೊ:ಶ್ರೀಲಂಕಾದಲ್ಲಿ ಸರಣಿ ಬಾಂಬ್ ದಾಳಿ ನಡೆಯುವ ಸಾಧ್ಯತೆ ಬಗ್ಗೆ ಅಲ್ಲಿನ ಪೊಲೀಸ್ ಮುಖ್ಯಸ್ಥರು ಹತ್ತು ದಿನಗಳ ಹಿಂದೆಯೇ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.
ದೇಶದ ಪ್ರಮುಖ ಚರ್ಚ್ಗಳ ಮೇಲೆ ದಾಳಿ ಆತ್ಮಾಹುತಿ ದಾಳಿಗೆ ಸಂಚು ಹೂಡಿರುವ ಸಾಧ್ಯತೆ ಇದೆ ಎಂದು ಗುಪ್ತಚರ ಮಾಹಿತಿ ಆಧರಿಸಿ ಪೊಲೀಸ್ ಮುಖ್ಯಸ್ಥ ಪುಜುತ್ ಜಯಸುಂದರ ಅವರು ಅಧಿಕಾರಿಗಳಿಗೆ ಎಚ್ಚರಿಕೆ ಸಂದೇಶ ಕಳುಹಿಸಿದ್ದರು. ಈ ಕುರಿತು ದಾಖಲೆಗಳು ಲಭ್ಯವಾಗಿವೆ ಎಂದು ಎಎಫ್ಪಿ ಸುದ್ದಿಸಂಸ್ಥೆ ವರದಿ ಮಾಡಿದೆ.
‘ಪ್ರಮುಖ ಚರ್ಚ್ಗಳು ಮತ್ತು ಭಾರತೀಯ ರಾಯಭಾರ ಕಚೇರಿಗಳನ್ನು ಗುರಿಯಾಗಿಸಿ ಆತ್ಮಾಹುತಿ ದಾಳಿ ನಡೆಸಲು ಎನ್ಟಿಜೆ (ನ್ಯಾಷನಲ್ ತೌಹೀತ್ ಜಮಾ ಅತ್) ಸಂಘಟನೆ ಸಂಚು ರೂಪಿಸುತ್ತಿದೆ ಎಂಬುದಾಗಿ ವಿದೇಶಿ ಗುಪ್ತಚರ ಸಂಸ್ಥೆಯೊಂದು ಸುಳಿವು ನೀಡಿದೆ’ ಎಂದು ಎಚ್ಚರಿಕೆ ಸಂದೇಶದಲ್ಲಿ ಉಲ್ಲೇಖಿಸಲಾಗಿತ್ತು.