ವಿಶ್ವಸಂಸ್ಥೆ: ಕೋವಿಡ್–19 ಪ್ರಸರಣದ ನಿಯಂತ್ರಣ, ಸಾಮಾಜಿಕ–ಆರ್ಥಿಕ ಕ್ಷೇತ್ರದ ಪುನಶ್ಚೇತನಕ್ಕಾಗಿ ಭಾರತ ನಡೆಸುತ್ತಿರುವ ಪ್ರಯತ್ನಕ್ಕೆ ವಿಶ್ವಸಂಸ್ಥೆಯ (ಯುಎನ್) ವಿವಿಧ ಅಂಗಸಂಸ್ಥೆಗಳು ಸಹಕಾರ ನೀಡುತ್ತಿವೆ ಎಂದುವಿಶ್ವಸಂಸ್ಥೆ ಮಹಾ ಕಾರ್ಯದರ್ಶಿಯವರ ವಕ್ತಾರ ಸ್ಟೇಫನ್ ದುಜಾರಿಕ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ‘ಭಾರತದಲ್ಲಿರುವ ವಿಶ್ವಸಂಸ್ಥೆಯ ಸ್ಥಾನಿಕ ಸಮನ್ವಯಾಧಿಕಾರಿ ರೆನಟಾ ಡೆಸಲಿಯೆನ್ ನೇತೃತ್ವದ ತಂಡ ಅಲ್ಲಿನ ಸರ್ಕಾರ ರೂಪಿಸಿರುವ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ನೆರವು ನೀಡುತ್ತಿದೆ’ ಎಂದರು.
ಭಾರತದಲ್ಲಿ ಕೋವಿಡ್–19 ಪಿಡುಗು ತೀವ್ರವಾಗಿ ಹರಡುತ್ತಿದ್ದು, ಸೋಂಕಿತರ ಸಂಖ್ಯೆ 42 ಲಕ್ಷಕ್ಕೂ ಅಧಿಕವಾಗಿದೆ. ಈ ಪಿಡುಗಿನ ವಿರುದ್ಧ ಹೋರಾಡುತ್ತಿರುವ ಭಾರತಕ್ಕೆ ವಿಶ್ವ ಆರೋಗ್ಯ ಸಂಸ್ಥೆ, ಯುನಿಸೆಫ್ ಸೇರಿದಂತೆ ವಿವಿಧ ಸಂಸ್ಥೆಗಳು ಬೆಂಬಲವಾಗಿ ನಿಂತಿವೆ.
ವಿಶ್ವದ ಇತರ ರಾಷ್ಟ್ರಗಳಿಗೂ ವಿಶ್ವಸಂಸ್ಥೆ ನೆರವಿನ ಹಸ್ತಚಾಚಿದೆ. ಸೋಂಕಿತರ ಸಂಪರ್ಕಕ್ಕೆ ಬಂದವರ ಪತ್ತೆ, ಆರೋಗ್ಯ ಕಾರ್ಯಕರ್ತರಿಗೆ ತರಬೇತಿ, ಪಿಪಿಇ ಕಿಟ್ಗಳ ಪೂರೈಕೆಯಲ್ಲಿ ಗಮನಾರ್ಹ ಸಾಧನೆ ಮಾಡಿದೆ ಎಂದು ಹೇಳಿದರು.
ವಿಶ್ವ ಆರೋಗ್ಯ ಸಂಸ್ಥೆ, ಯುನಿಸೆಫ್, ಯುಎನ್ಡಿಪಿ, ವಿಶ್ವಸಂಸ್ಥೆಯ ಜನಸಂಖ್ಯಾ ನಿಧಿ, ಅಂತರರಾಷ್ಟ್ರೀಯ ಕಾರ್ಮಿಕ ಸಂಘಟನೆ (ಐಎಲ್ಒ) ಸಿಬ್ಬಂದಿ ಈ ಪಿಡುಗಿನ ವಿರುದ್ಧದ ಹೋರಾಟಕ್ಕೆ ಕೈಜೋಡಿಸಿದ್ದಾರೆ ಎಂದೂ ತಿಳಿಸಿದರು.