ಬೆಂಗಳೂರು: ‘ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಪಕ್ಕದ ಮದ್ಯದಂಗಡಿ ಸ್ಥಳಾಂತರ ಮಾಡುವಂತೆ ಸುಪ್ರೀಂ ಕೋರ್ಟ್ ಹೊರಡಿಸಿರುವ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರವೇ ಮೇಲ್ಮನವಿ ಸಲ್ಲಿಸಿ ಸಮಸ್ಯೆ ಬಗೆಹರಿಸಬೇಕು’ ಎಂದು ಒತ್ತಾಯಿಸಿ ಮದ್ಯ ವ್ಯಾಪಾರಿಗಳು ಗುರುವಾರ ಪ್ರತಿಭಟನಾ ರ್ಯಾಲಿ ನಡೆಸಿದರು.
ಮದ್ಯ ವ್ಯಾಪಾರಿಗಳ ಒಕ್ಕೂಟದ ನೇತೃತ್ವದಲ್ಲಿ ನಗರದ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ನಡೆದ ಮೆರವಣಿಗೆಯಲ್ಲಿ ‘ಅಬಕಾರಿ ಕಾಯ್ದೆ 5ನ್ನು ತಿದ್ದುಪಡಿ ಮಾಡಿ’ ಎಂಬ ಘೋಷಣಾ ಫಲಕ ಪ್ರದರ್ಶಿಸಲಾಯಿತು.
ಈ ವೇಳೆ ಒಕ್ಕೂಟದ ಖಜಾಂಚಿ ಟಿ.ವಿ.ಮೆಹರವಾಡೆ ಅವರು ಮಾತನಾಡಿ, ‘ಕೋರ್ಟ್ ಆದೇಶ ರದ್ದುಪಡಿಸುವಂತೆ ರಾಜ್ಯ ಸರ್ಕಾರವು ರಾಷ್ಟ್ರಪತಿಯವರಿಗೆ ಅರ್ಜಿ ಸಲ್ಲಿಸಬೇಕು’ ಎಂದು ಹೇಳಿದರು.