ಬೆಂಗಳೂರು: ಕಳೆದ ವರ್ಷ ಆದಾಯ ತೆರಿಗೆ ಇಲಾಖೆ ದಾಳಿಗೆ ಗುರಿಯಾಗಿದ್ದ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಅವರ ತಾಯಿ ಗೌರಮ್ಮ ಸೇರಿದಂತೆ ಕುಟುಂಬದ ಸದಸ್ಯರನ್ನು ಪ್ರತ್ಯೇಕ ಪ್ರಕರಣದಲ್ಲಿ ಐ.ಟಿ ಅಧಿಕಾರಿಗಳು ವಿಚಾರಣೆ ನಡೆಸಿದರು.
ಇಲ್ಲಿನ ಕನಿಂಗ್ಹ್ಯಾಂ ರಸ್ತೆಯಲ್ಲಿರುವ ಐ.ಟಿ. ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಶಿವಕುಮಾರ್, ಅವರ ತಾಯಿ, ಸಂಸದ ಡಿ.ಕೆ. ಸುರೇಶ್ ಸೇರಿದಂತೆ ಕುಟುಂಬದ ಸದಸ್ಯರಿಗೆ ಬುಧವಾರ ನೋಟಿಸ್ ನೀಡಿತ್ತು. ಅದರಂತೆ ವಿಚಾರಣೆಗೆ ಹಾಜರಾಗಿದ್ದರು. ಸುಮಾರು 4 ಗಂಟೆ ವಿಚಾರಣೆ ಮಾಡಲಾಗಿದೆ.
ಶಿವಕುಮಾರ್ ಹಾಗೂ ಅವರ ಕುಟುಂಬದವರು, ಆಪ್ತರ ಮೇಲೆ ಐ.ಟಿ ದಾಳಿ ನಡೆದಿತ್ತು. ಆದಾಯ ಮೀರಿ ಆಸ್ತಿ ಸಂಪಾದನೆ ಮಾಡಿರುವುದು ದಾಳಿ ವೇಳೆ ಪತ್ತೆಯಾಗಿತ್ತು ಎಂದು ಮೂಲಗಳು ಹೇಳಿದ್ದವು. ಈ ಹಿನ್ನೆಲೆಯಲ್ಲಿ ಶಿವಕುಮಾರ್ ಹಾಗೂ ಅವರ ಕುಟುಂಬದ ಸದಸ್ಯರ ವಿಚಾರಣೆ ನಡೆಯುತ್ತಿದೆ.