ಮೈಸೂರು: ಇಲ್ಲಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಭಾನುವಾರ ರಾತ್ರಿ 11 ಗಂಟೆಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ವಜುಭಾಯಿ ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಬರಮಾಡಿಕೊಂಡರು.
ಮೋದಿ ಅವರಿಗೆ ಸಿದ್ದರಾಮಯ್ಯ ಗುಲಾಬಿ ಹೂ ನೀಡಿ, ಶಾಲು ಹೊದಿಸಿ ಸ್ವಾಗತ ಕೋರಿದರು. ಆಗ ಇಬ್ಬರೂ ಪರಸ್ಪರ ನಗು ಬೀರುತ್ತಾ ಕೈಕುಲುಕಿದರು.
ಕೇಂದ್ರ ಸಚಿವರಾದ ಅನಂತಕುಮಾರ್, ಡಿ.ವಿ.ಸದಾನಂದಗೌಡ, ಪ್ರಕಾಶ್ ಜಾವಡೇಕರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ರಾಜ್ಯ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ, ಡಿಜಿಪಿ ನೀಲಮಣಿ ರಾಜು, ಜಿಲ್ಲಾಧಿಕಾರಿ ಡಿ.ರಂದೀಪ್ ಇದ್ದರು.
ಮೋದಿ ಅವರು ವಿಶೇಷ ಭದ್ರತೆಯಲ್ಲಿ ಗಾಲ್ಫ್ ಕ್ಲಬ್ ಬಳಿ ಇರುವ ರ್ಯಾಡಿಸನ್ ಬ್ಲ್ಯೂ ಹೋಟೆಲಿಗೆ ತೆರಳಿದರು. ಮಹಾರಾಜ ಕಾಲೇಜು ಮೈದಾನದಲ್ಲಿ ಸೋಮವಾರ ಆಯೋಜಿಸಿರುವ ಬಿಜೆಪಿ ಸಮಾವೇಶ, ರೈಲ್ವೆ ಯೋಜನೆಗಳ ಉದ್ಘಾಟನೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.