ಸಾಹಿತಿ ಶಾಂತಿನಾಥ ದೇಸಾಯಿ ಇನ್ನಿಲ್ಲ
ಬೆಂಗಳೂರು, ಮಾರ್ಚ್ 26– ಆಧುನಿಕ ಕನ್ನಡ ಸಾಹಿತ್ಯದ ಪ್ರಖ್ಯಾತ ಲೇಖಕ ಹಾಗೂ ಕುವೆಂಪು ವಿಶ್ವವಿದ್ಯಾಲಯದ ಮಾಜಿ ಕುಲಪತಿ ಡಾ.ಶಾಂತಿನಾಥ ದೇಸಾಯಿ (70) ಅವರು ಇಂದು ಕೊಲ್ಲಾಪುರದಲ್ಲಿ ನಿಧನರಾದರು.
ಕೊಲ್ಲಾಪುರದ ಶಿವಾಜಿ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ನಿವೃತ್ತಿ ಹೊಂದಿದ್ದ ಅವರು ಕೆಲವು ತಿಂಗಳಿನಿಂದ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಬಿಎಸ್ಪಿ ಸದಸ್ಯರಿಗೆ ಆಮಿಷ ಆರೋಪ: ಕೋಲಾಹಲ
ನವದೆಹಲಿ, ಮಾರ್ಚ್ 26 (ಪಿಟಿಐ)– ಸಂಸತ್ತಿನಲ್ಲಿ ಬಹುಮತ ಗಳಿಸಲು ಬಿಜೆಪಿ ನೇತೃತ್ವದ ಸರ್ಕಾರ ತಮ್ಮ ಪಕ್ಷದ ಸದಸ್ಯರಿಗೆ ಆಮಿಷ ತೋರಿಸುತ್ತಿದೆ ಎಂದು ಆರೋಪಿಸಿ ಪ್ರಧಾನಿ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸಲು ಬಿಎಸ್ಪಿ ಸದಸ್ಯರೊಬ್ಬರು ಯತ್ನಿಸಿದ್ದರಿಂದ ಲೋಕಸಭೆಯಲ್ಲಿ ಇಂದು ಭಾರಿ ಕೋಲಾಹಲ ಉಂಟಾಗಿ ಕಲಾಪವನ್ನು ಎರಡು ಬಾರಿ ಮುಂದೂಡಬೇಕಾಯಿತು.
ಬೆಳಿಗ್ಗೆ ಸದನ ಆರಂಭವಾಗುತ್ತಿದ್ದಂತೆಯೇ ಬಿಎಸ್ಪಿ ಸದಸ್ಯ ಆರೀಫ್ ಮಹಮ್ಮದ್ ಖಾನ್ ಅವರು ಸರ್ಕಾರದ ವಿರುದ್ಧ ಆರೋಪ ಮಾಡಿದಾಗ ಸದನದಲ್ಲಿ ಗಲಾಟೆ ಆರಂಭವಾಯಿತು. ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರು ಪರಸ್ಪರ ಆರೋಪ, ಪ್ರತ್ಯಾರೋಪ ಮಾಡಿಕೊಂಡರು. ಬಿಎಸ್ಪಿ, ಕಾಂಗ್ರೆಸ್ ಮತ್ತು ಎಡಪಕ್ಷಗಳ ಸದಸ್ಯರು ಸಭಾಧ್ಯಕ್ಷ ಪೀಠದ ಬಳಿಗೆ ತೆರಳಿ ಈ ವಿಷಯದ ಬಗ್ಗೆ ಚರ್ಚೆಗೆ ಇನ್ನಷ್ಟು ಕಾಲಾವಕಾಶ ನೀಡುವಂತೆ ಒತ್ತಾಯಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.