ಪ್ರಸಾರ ಭಾರತಿ ನಿಗಮಕ್ಕೆ ಅಧಿಕ ಸ್ವಾತಂತ್ರ್ಯ: ವ್ಯಾಪಕ ತಿದ್ದುಪಡಿ
ನವದೆಹಲಿ, ಅ. 31– ಆಕಾಶವಾಣಿ ಹಾಗೂ ದೂರದರ್ಶನಗಳಿಗೆ ಸಂಪೂರ್ಣ ಸ್ವಾಯತ್ತತೆ ನೀಡುವ ಪ್ರಸಾರ ಭಾರತಿ ಮಸೂದೆಯ ಕಾರ್ಯಗಳನ್ನು ನಿಗಾ ವಹಿಸಲು 22 ಸದಸ್ಯರ ಸಮಿತಿ ರಚಿಸುವ ಯೋಜನೆಯನ್ನು ಕೈಬಿಟ್ಟು ಮಸೂದೆಗೆ ಸೂಕ್ತ ತಿದ್ದುಪಡಿ ತರುವ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮಗಳಿಗೆ ಸಂಪೂರ್ಣ ಸ್ವಾಯತ್ತತೆ ಕಲ್ಪಿಸಲಾಗಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಜೈಪಾಲ್ ರೆಡ್ಡಿ ಅವರು ಇಂದು ಹೇಳಿದರು.
1990ರ ಪ್ರಸಾರ ಭಾರತಿ ಕಾಯ್ದೆಯನ್ನು ತಿದ್ದುಪಡಿ ಮಾಡುವ ಸುಗ್ರೀವಾಜ್ಞೆಯನ್ನು ಬುಧವಾರ ರಾತ್ರಿ ರಾಷ್ಟ್ರಪತಿ ಕೆ.ಆರ್.ನಾರಾಯಣನ್ ಹೊರಡಿಸಿದರು.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಇಂದು ಅಸ್ತಿತ್ವಕ್ಕೆ
ಹುಬ್ಬಳ್ಳಿ, ಅ. 31– ವಿವಿಧ ಕಾರ್ಮಿಕ ಸಂಘಟನೆಗಳ ಪರ ಮತ್ತು ವಿರೋಧದ ಮಧ್ಯೆ ದೀರ್ಘಕಾಲದಿಂದ ನೆನೆಗುದಿಯಲ್ಲಿದ್ದ ನೂತನ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನಾಳೆ ಇಲ್ಲಿ ಅಸ್ತಿತ್ವಕ್ಕೆ ಬರಲಿದೆ. ಕೇಂದ್ರ ಮಾನವ ಸಂಪನ್ಮೂಲ ಸಚಿವ ಎಸ್.ಆರ್.ಬೊಮ್ಮಾಯಿ ಅವರು ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯನ್ನು ವಿಧ್ಯುಕ್ತವಾಗಿ ಉದ್ಘಾಟಿಸಲಿದ್ದಾರೆ.
ಬೆಳಗಾವಿ, ಬಿಜಾಪುರ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ ಈ ಏಳು ಜಿಲ್ಲೆಗಳಲ್ಲಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಆರು ಸಾರಿಗೆ ವಿಭಾಗಗಳು ನೂತನ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಗೆ ಬರಲಿವೆ.