ಸುಮಾರು ನಾಲ್ಕು ತಾಸುಗಳಿಗೂ ಹೆಚ್ಚು ಕಾಲ ಇಡೀ ಪಟ್ಟಣದಲ್ಲಿ ಉಂಟಾದ ಅರಾಜಕ ಪರಿಸ್ಥಿತಿಯಿಂದಾಗಿ ಹಿಂಸಾಚಾರ, ಆಸ್ತಿಪಾಸ್ತಿ ನಷ್ಟದಲ್ಲಿ ತೊಡಗಿದ ಸಾವಿರಾರು ಸಂಖ್ಯೆಯಲ್ಲಿದ್ದ ಜನರು ಸಮೂಹಸನ್ನಿಗೆ ಒಳಗಾದಂತೆ ವರ್ತಿಸಿ ರಾಜ್ಯ ಸರ್ಕಾರದ ಹಾಗೂ ಕೇಂದ್ರದ ಹಲವಾರು ಕಚೇರಿಗಳಿಗೆ ನುಗ್ಗಿ ಪೀಠೋಪಕರಣಗಳು, ದಾಖಲೆ ಪತ್ರಗಳು, ನಗದು ಹಣ, ಸರ್ಕಾರಿ ಹಾಗೂ ಸಾರ್ವಜನಿಕರ ವಾಹನಗಳು ಸೇರಿದಂತೆ ಕಚೇರಿಯ ಸಮಸ್ತ ವಸ್ತುಗಳಿಗೆ ಬೆಂಕಿ ಹಚ್ಚಿ ನಾಶಪಡಿಸಿದ್ದಾರೆ. ವ್ಯಾಪಕ ಹಿಂಸಾಚಾರದಲ್ಲಿ ಸುಮಾರು 15 ಕೋಟಿ ರೂಪಾಯಿಗೂ ಹೆಚ್ಚಿನ ನಷ್ಟ ಆಗಿರಬಹುದು ಎಂದು ಪ್ರಾಥಮಿಕವಾಗಿ ಅಂದಾಜು ಮಾಡಲಾಗಿದೆ.