ಬೆಂಗಳೂರು, ಡಿ. 9– ಮಹಾನಗರಪಾಲಿಕೆ, ನಗರಸಭೆ ಮತ್ತು ಪುರಸಭೆಗಳ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಅನುಸರಿಸಬೇಕಾದ ನೀತಿ ಸಂಹಿತೆ ವಿವರಿಸಲು ರಾಜ್ಯ ಚುನಾವಣಾ ಆಯೋಗವು ಇಂದು ಇಲ್ಲಿ ಕರೆದಿದ್ದ ಸರ್ವ ಪಕ್ಷಗಳ ಸಭೆಯಲ್ಲಿ ಪಾಲ್ಗೊಂಡಿದ್ದ ವಿರೋಧ ಪಕ್ಷಗಳ ಪ್ರತಿನಿಧಿಗಳು, ಕ್ಷೇತ್ರ ಪುನರ್ವಿಂಗಡಣೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಬೆಂಗಳೂರು, ಮೈಸೂರು, ಬೆಳಗಾವಿ, ಕಲಬುರ್ಗಿ, ಮಂಗಳೂರು ಮತ್ತು ಹುಬ್ಬಳ್ಳಿ– ಧಾರವಾಡ ಮಹಾನಗರಪಾಲಿಕೆಗಳು ಸೇರಿದಂತೆ 157 ಸ್ಥಳೀಯ ಸಂಸ್ಥೆಗಳಿಗೆ ಜ. 7ರಂದು ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ಪಿ.ಎಸ್. ನಾಗರಾಜನ್ ತಿಳಿಸಿದರು.
ಜನಹಿತ ಮರೆತು ಸಾಗಿರುವ ವ್ಯವಸ್ಥೆ: ಪಟೇಲ್ ಕಳವಳ
ಬೆಂಗಳೂರು, ಡಿ. 9– ‘ರಾಜಕಾರಣಿಗಳು, ಅಧಿಕಾರಿಗಳು, ನ್ಯಾಯಾಧೀಶರು ಈ ಎಲ್ಲರ ಕಾರ್ಯಕ್ಷಮತೆ, ಗುಣಮಟ್ಟ ಕಡಿಮೆಯಾಗುತ್ತಿದೆ. ಜನ ಈ ಕುಸಿತದ ಮೂಕಪ್ರೇಕ್ಷಕರಾಗಿದ್ದಾರೆ. ಈ ವ್ಯವಸ್ಥೆ ಜನರ ಒಳಿತನ್ನೇ ಮರೆತು ಸಾಗುತ್ತಿದೆ’ ಎಂದು ಉಪಮುಖ್ಯಮಂತ್ರಿ ಜೆ.ಎಚ್. ಪಟೇಲ್ ನುಡಿದರು.
‘ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಗಳ ಅಧಿಕಾರ, ಹಕ್ಕು ಬಾಧ್ಯತೆ ಮತ್ತು ಪರಿಮಿತಿಗಳು’ ಕುರಿತ ವಿಚಾರ ಸಂಕಿರಣದಲ್ಲಿ ಅವರು ಅಧ್ಯಕ್ಷ ಭಾಷಣ ಮಾಡಿದರು.