ಮಂಗಳೂರು, ಆ. 2– ಸರ್ಕಾರ ದೂರವಾಣಿ ಕದ್ದಾಲಿಕೆ ನಡೆಸುತ್ತಿದೆ ಎಂಬ ತಮ್ಮ ಆರೋಪವನ್ನು ಗಂಭೀರವಾಗಿ ಪರಿಗಣಿಸಿ ಅದರ ಬಗ್ಗೆ ಸದನ ಸಮಿತಿ ರಚಿಸಿ ತನಿಖೆ ನಡೆಸಬೇಕೆಂದು ರಾಷ್ಟ್ರೀಯ ನವನಿರ್ಮಾಣ ವೇದಿಕೆಯ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು ಇಂದು ಇಲ್ಲಿ ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ವಿರೋಧ ಪಕ್ಷದ ನಾಯಕರು, ಪಕ್ಷದ ಭಿನ್ನಮತೀಯರು ಮತ್ತು ಪತ್ರಕರ್ತರ ದೂರವಾಣಿಯನ್ನು ಸರ್ಕಾರ ಕದ್ದಾಲಿಸುವುದು ಮುಂದುವರಿಯುತ್ತಿದೆ ಎಂಬ ಬಗ್ಗೆ ತಮಗೆ ಅಧಿಕೃತ ಮೂಲಗಳಿಂದ ಮಾಹಿತಿ ದೊರೆತಿದೆ ಎಂದರು.
ಕಳೆದ ಎರಡು ವರ್ಷಗಳಿಂದ, ದೇವೇಗೌಡರು ಮುಖ್ಯಮಂತ್ರಿ ಆದಾಗಿನಿಂದ ದೂರವಾಣಿ ಕದ್ದಾಲಿಕೆ ನಡೆಯುತ್ತಿದೆ ಎಂದು ಅವರು ಹೇಳಿದರು.