ಪ್ರಸ್ತುತ ಸಂದರ್ಭದಲ್ಲಿ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪೆಟ್ರೋಲ್ ಬೆಲೆ ಗಗನಕ್ಕೆ ಏರಿದೆ. ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಸರಿಯಾಗಿ ವಿತರಣೆಯಾಗುತ್ತಿಲ್ಲ, ಕೂಲಿಕಾರ್ಮಿಕರ ಪರಿಸ್ಥಿತಿ ಅಧೋಗತಿಗಿಳಿದಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ತಲುಪಿದೆ. ಇಂತಹ ಸಮಸ್ಯೆಗಳತ್ತ ಗಮನಹರಿಸುವುದು ಬಿಟ್ಟು, ಆಡಳಿತ ಪಕ್ಷದವರು ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ, ಹಾಗೆಯೇ ವಿರೋಧ ಪಕ್ಷದವರು ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಿದಂತೆ ಮುಖ್ಯಮಂತ್ರಿ ಅಭ್ಯರ್ಥಿಯ ಆಯ್ಕೆ ವಿಚಾರದಲ್ಲಿ ಅನಗತ್ಯ ಗದ್ದಲ ಎಬ್ಬಿಸುತ್ತಿರುವುದು ದುರದೃಷ್ಟಕರ. ಈ ಕುರಿತು ಎರಡೂ ಪಕ್ಷಗಳು ಆತ್ಮಾವಲೋಕನ ಮಾಡಿಕೊಳ್ಳಲಿ. ಇದು ರಾಜಕಾರಣ ಮಾಡುವ ಸಮಯವಲ್ಲ ಎಂಬುದನ್ನು ಅರಿತು, ಕೊರೊನಾ ನಿಯಂತ್ರಣ ಕಾರ್ಯದಲ್ಲಿ ಎಲ್ಲರೂ ಪಕ್ಷಭೇದ ಮರೆತು ಶ್ರಮಿಸಲಿ.