ನಾವು ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿರುವ ಹೊತ್ತಿನಲ್ಲಿ, ಕಲುಷಿತ ನೀರು ಕುಡಿದು ಜನ ಸಾಯುತ್ತಿರುವ ಸುದ್ದಿಗಳು ನಾವು ಇದುವರೆಗೂ ಸಾಧಿಸಿರುವ ಪ್ರಗತಿಯ ಬಗ್ಗೆ ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿವೆ. ಒಂದೆಡೆ, ಶುದ್ಧ ಕುಡಿಯುವ ನೀರನ್ನು ಜನರಿಗೆ ಒದಗಿಸುವ ಸಲುವಾಗಿ ಬೃಹತ್ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಪ್ರಯತ್ನಗಳು ನಡೆಯುತ್ತಿವೆ. ಇನ್ನೊಂದೆಡೆ, ನೀರು ಸರಬರಾಜು ವ್ಯವಸ್ಥೆಯು ಹಳ್ಳ ಹಿಡಿದು ರಾಯಚೂರು ಜಿಲ್ಲೆಯಲ್ಲಿ ಕಲುಷಿತ ನೀರನ್ನು ಕುಡಿದು ಜನ ಸಾಯುತ್ತಿದ್ದಾರೆ. ಇದಕ್ಕೆ ಕಾರಣ ಅಧಿಕಾರಿಶಾಹಿಯ ಬೇಜವಾಬ್ದಾರಿತನ ಮಾತ್ರ. ಇಂತಹ ಪ್ರಕರಣಗಳಲ್ಲಿ ಸರಿಯಾಗಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ನಮ್ಮ ದೇಶ ಪ್ರಗತಿಯ ಪಥದಲ್ಲಿ ಸಾಗಲು ಸಾಧ್ಯವಿಲ್ಲ.