ಸದ್ಯ ರಾಜ್ಯದಲ್ಲಿ 65,911 ಅಂಗನವಾಡಿ ಕಾರ್ಯಕರ್ತೆಯರು, 62,580 ಸಹಾಯಕಿಯರು, 42,000 ಆಶಾ ಕಾರ್ಯಕರ್ತೆಯರು ಕಾರ್ಯನಿರ್ವಹಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ, ರಾಜ್ಯದಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿರುವ ಕುರಿತಂತೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸುತ್ತಿದೆ. ರಾಜ್ಯದಲ್ಲಿ 1,488 ಅಂಗನವಾಡಿ ಕಾರ್ಯಕರ್ತೆಯರು ಮತ್ತು 2,811 ಸಹಾಯಕಿಯರ ಹುದ್ದೆಗಳು ಖಾಲಿ ಇದ್ದು ಅಪೌಷ್ಟಿಕತೆ ನಿವಾರಣೆ ಹಾಗೂ ನಿರ್ವಹಣೆ ಮೇಲೆ ಇದು ವ್ಯತಿರಿಕ್ತ ಪರಿಣಾಮ ಬೀರುತ್ತದೆ; ಹೀಗಾಗಿ, ತಕ್ಷಣವೇ ಈ ಹುದ್ದೆಗಳನ್ನು ಭರ್ತಿ ಮಾಡಿಸಬೇಕೆಂದು ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರವು ಪೀಠಕ್ಕೆ ಸಲಹೆ ನೀಡಿದೆ. ಇದು ಸ್ವಾಗತಾರ್ಹವಾಗಿದ್ದು, ತಕ್ಷಣವೇ ಅನುಷ್ಠಾನವಾಗಬೇಕು. ಇದೇ ರೀತಿ, ಜನಸಂಖ್ಯೆ ಆಧಾರಿತವಾಗಿ ಸಾವಿರಾರು ಸಂಖ್ಯೆಯಲ್ಲಿ ಆಶಾ ಕಾರ್ಯಕರ್ತೆಯರ ಹುದ್ದೆಗಳು ಖಾಲಿ ಇವೆ. ಇವನ್ನೂ ತಕ್ಷಣವೇ ಭರ್ತಿ ಮಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು. ತನ್ಮೂಲಕ ಗ್ರಾಮೀಣ ಮತ್ತು ವ್ಯವಸ್ಥೆಯ ತಳಮಟ್ಟಕ್ಕೆ ಆರೋಗ್ಯ ಸೌಲಭ್ಯವನ್ನು ಖಾತರಿ ಗೊಳಿಸಬೇಕು.