ನ್ಯಾಯಾಧೀಶರು ಸರ್ವಜ್ಞರಲ್ಲ ಎಂಬ ಬೇಜವಾಬ್ದಾರಿಯ ಹಾಗೂ ಉಡಾಫೆಯ ಹೇಳಿಕೆ ನೀಡಿರುವ ಬಿಜೆಪಿ ಮುಖಂಡ ಸಿ.ಟಿ.ರವಿ ಅವರ ಹೇಳಿಕೆ ನೇರ ನ್ಯಾಯಾಂಗ ನಿಂದನೆಯಾಗಿದ್ದು, ರಾಜ್ಯ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕಾಗಿದೆ. ಕೋವಿಡ್ ಲಸಿಕೆ ವಿತರಣೆಯಲ್ಲಿ ರಾಜ್ಯದಾದ್ಯಂತ ಉಂಟಾ ಗಿರುವ ಗೊಂದಲಗಳಿಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ನಡೆಸುತ್ತಿದೆ. ನ್ಯಾಯಾಲಯಗಳು ಕೇವಲ ಪ್ರಕರಣಗಳ ವಿಚಾರಣೆ ನಡೆಸುವುದಕ್ಕೆ ಸೀಮಿತವಾಗದೆ ಜನರ ಕಷ್ಟಕಾರ್ಪಣ್ಯ, ದುಃಖ ದುಮ್ಮಾನಗಳನ್ನು ಪರಿಹರಿಸುವ ಮಹತ್ವದ ಜವಾಬ್ದಾರಿ ಹೊಂದಿವೆ.