ಕೋವಿಡ್ ನಿರ್ವಹಣೆಯ ಹೆಸರಿನಲ್ಲಿ ರಾಜ್ಯ ಸರ್ಕಾರವು ನಾಲ್ಕು ತಿಂಗಳಿನಲ್ಲಿ ಖರ್ಚು ಮಾಡಿರುವ ₹ 4,167 ಕೋಟಿ ಪೈಕಿ ₹ 2,000 ಕೋಟಿ ಅವ್ಯವಹಾರ ನಡೆದಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗಂಭೀರ ಸ್ವರೂಪದ ಆರೋಪ ಮಾಡಿದ್ದಾರೆ. ಈ ಬಗ್ಗೆ ಹೈಕೋರ್ಟ್ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕೆಂದು ಆಗ್ರಹಪಡಿಸಿದ್ದಾರೆ. ಹಲವಾರು ದಿನಗಳಿಂದ ಈ ಬಗ್ಗೆ ಆಡಳಿತ ಹಾಗೂ ವಿರೋಧ ಪಕ್ಷಗಳ ನಾಯಕರ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಲೇ ಇತ್ತು. ಆರೋಗ್ಯ ಸಚಿವ ಶ್ರೀರಾಮುಲು ಸೇರಿದಂತೆ ಕೆಲವು ಸಚಿವರು ಕೋವಿಡ್ ಚಿಕಿತ್ಸಾ ಉಪಕರಣಗಳ ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲವೆಂದು ಹೇಳುತ್ತಾ ಸರ್ಕಾರವನ್ನು ಸಮರ್ಥಿಸಿಕೊಳ್ಳುತ್ತಲೇ ಬಂದಿದ್ದರು. ಆದರೆ ಸಿದ್ದರಾಮಯ್ಯಅವರು ದಾಖಲೆ ಸಮೇತ ಆರೋಪ ಮಾಡಿರುವುದರಿಂದ ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಇಲ್ಲವಾದರೆ ಸರ್ಕಾರದ ನಡೆಯನ್ನು ಜನ ಅನುಮಾನದ ದೃಷ್ಟಿಯಿಂದ ನೋಡಲು ವಿಪುಲ ಅವಕಾಶಗಳಿವೆ.