ಕೊರೊನಾ ಸೋಂಕು ರಾಷ್ಟ್ರವ್ಯಾಪಿ ಹರಡಿದೆ. ಸೋಂಕು ಹರಡುವಿಕೆಯನ್ನು ತಡೆಗಟ್ಟಲು ವಿಧಿಸಿರುವ ನಿಯಮಗಳನ್ನು ಉಲ್ಲಂಘಿಸುವವರಿಗೆ ದಂಡ ವಿಧಿಸಲಾಗುತ್ತಿದೆ. ಆದರೆ ಗ್ರಾಮೀಣ ಭಾಗದಲ್ಲಿ ಸಂಚರಿಸುವ ಖಾಸಗಿ ಬಸ್ಗಳಲ್ಲಿ ಈ ಯಾವ ನಿಯಮಗಳೂ ಪಾಲನೆಯಾಗದಿರುವುದು ವಿಷಾದಕರ. ಇನ್ನು, ಬಸ್ನಲ್ಲೇ ಗುಟ್ಕಾ ಜಗಿಯುವುದರಿಂದ ಸಹಪ್ರಯಾಣಿಕರಿಗೆ ತೊಂದರೆಯಾಗುವುದರ ಜೊತೆಗೆ ಕೊರೊನಾದಂತಹ ಅಪಾಯಕಾರಿ ರೋಗಗಳು ಸುಲಭವಾಗಿ ಹರಡಲು ಮಾರ್ಗವಾಗುತ್ತದೆ. ಗ್ರಾಮೀಣ ಭಾಗದ ಎಷ್ಟೋ ಜನ ಅನಕ್ಷರಸ್ಥರು. ಸರಿಯಾದ ತಿಳಿವಳಿಕೆ ಇಲ್ಲದ ಕಾರಣ ಕೊರೊನಾ ಸೋಂಕಿನ ಅಪಾಯವನ್ನು ನಿರ್ಲಕ್ಷಿಸುವವರೇ ಹೆಚ್ಚು. ಹೀಗೆ ನಿಯಮಗಳನ್ನು ಪಾಲಿಸದ ಬಸ್, ಆಟೊ ಚಾಲಕರು ಮತ್ತು ಪ್ರಯಾಣಿಕರ ವಿರುದ್ಧ ಸರ್ಕಾರ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು. ಸುರಕ್ಷತೆ ಪಾಲಿಸುವಂತೆ ಸೂಚನಾ ಫಲಕಗಳನ್ನು ಆಳವಡಿಸಬೇಕು. ಸಾರ್ವಜನಿಕರನ್ನು ಸಾಗಿಸುವ ವಾಹನಗಳಲ್ಲಿ ಗುಟ್ಕಾ, ಪಾನ್ ಮಸಾಲಾ ಜಗಿಯುವುದನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಅಧಿಕಾರಿಗಳು ಆಗಾಗ ಪರಿಶೀಲನೆ ನಡೆಸಿ, ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು.