ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕಾಫಿ ತೋಟಗಳಲ್ಲಿ ಕಡಿಮೆ ಕೂಲಿಗೆ ದುಡಿಯಲು ಬಂದಿರುವ ಬಾಂಗ್ಲಾದೇಶದ ಪ್ರಜೆಗಳು ಅಗತ್ಯ ದಾಖಲೆಗಳನ್ನು ಮಾಡಿಸಿಕೊಂಡು ಇಲ್ಲಿಯವರೇ ಆಗುತ್ತಿದ್ದಾರೆ. ದೇಶದ ಆಂತರಿಕ ಭದ್ರತೆಗೆ ಆತಂಕ ತಂದೊಡ್ಡುವ ಸಾಧ್ಯತೆ ಇರುವ ಈ ವಿದೇಶಿಯರನ್ನು ದೇಶದೊಳಕ್ಕೆ ಬಿಟ್ಟ, ಇವರಿಗೆ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಚುನಾವಣಾ ಗುರುತಿನ ಚೀಟಿಯಂತಹ ದಾಖಲೆಗಳನ್ನು ಮಾಡಿಸಿಕೊಟ್ಟವರಿಗೆ ಕಠಿಣ ಶಿಕ್ಷೆ ಕೊಡಿಸಬೇಕಾಗಿದೆ. ಇಲ್ಲದಿದ್ದರೆ ಕರ್ನಾಟಕವೂ ಸೇರಿದಂತೆ ಹಲವು ರಾಜ್ಯಗಳಲ್ಲಿನ ಮೂಲನಿವಾಸಿಗಳು ಅಸ್ಸಾಂನಂತಹ ರಾಜ್ಯವು ಇನ್ನೂ ಎದುರಿಸುತ್ತಿರುವ ಸಮಸ್ಯೆಗಳನ್ನು ಎದುರಿಸುವ ಕಾಲ ಬಹುದೂರ ಇರಲಾರದು ಎನಿಸುತ್ತದೆ.