ಭ್ರಷ್ಟಾಚಾರ ನಿಗ್ರಹ ದಳದಂತಹ ಸಂಸ್ಥೆಗಳಿಗೆ ಕಳಂಕಿತ ಅಧಿಕಾರಿಗಳನ್ನು ನೇಮಿಸಬಾರದು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೀಡಿರುವ ನಿರ್ದೇಶನ ಸಕಾಲಿಕವಾಗಿದೆ. ಪಿಎಸ್ಐ ನೇಮಕಾತಿ ಹಗರಣವು ಪೊಲೀಸ್ ಇಲಾಖೆಯಲ್ಲಿ ನಡೆದಿರುವ ಭ್ರಷ್ಟಾಚಾರದ ಆಳ ಮತ್ತು ಅಗಲದ ಬಗ್ಗೆ ಕ್ಷಕಿರಣ ಬೀರುತ್ತದೆ.
ಮುಖ್ಯಮಂತ್ರಿಯಾಗಿದ್ದ ರಾಮಕೃಷ್ಣ ಹೆಗಡೆ ಅವರ ದೂರದೃಷ್ಟಿಯಿಂದಾಗಿ 80ರ ದಶಕದಲ್ಲಿ, ಆಡಳಿತದಲ್ಲಿ ಭ್ರಷ್ಟಾಚಾರವನ್ನು ನಿಗ್ರಹಿಸಲು ಲೋಕಾಯುಕ್ತ ಸಂಸ್ಥೆಯನ್ನು ಸ್ಥಾಪಿಸಲಾಯಿತು. ನ್ಯಾಯಮೂರ್ತಿಗಳಾದ ಎನ್. ವೆಂಕಟಾಚಲ ಮತ್ತು ಸಂತೋಷ ಹೆಗ್ಡೆ ಅವರ ನೇತೃತ್ವದಲ್ಲಿ ಲೋಕಾಯುಕ್ತ ಅಚ್ಚರಿಪಡುವಷ್ಟು ಕೆಲಸ ಮಾಡಿತು.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಲೋಕಾಯುಕ್ತಕ್ಕೆ ಬಲ ತುಂಬುವ ಬದಲು ಅದಕ್ಕೆ ಪರ್ಯಾಯವಾಗಿ ಭ್ರಷ್ಟಾಚಾರ ನಿಗ್ರಹ ದಳವನ್ನು ಸ್ಥಾಪಿಸಿತು. ಈ ದಳವೇ ಈಗ ಭ್ರಷ್ಟಾಚಾರದ ಕೂಪವಾಗಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಸಂದೇಶ್ ಅವರು ಇತ್ತೀಚೆಗೆ ನೇರವಾಗಿ ಹೇಳಿದ್ದಾರೆ. ತನಿಖಾ ಸಂಸ್ಥೆಗಳೇ ಭ್ರಷ್ಟಾಚಾರದ ಕೂಪಗಳಾದರೆ ಅವುಗಳಿಂದ ಏನನ್ನು ತಾನೇ ನಿರೀಕ್ಷಿಸಲು ಸಾಧ್ಯ?