ಗ್ರಾಮೀಣ ಪ್ರದೇಶದ ಜನರ ಬದುಕು ಹಸನು ಆಗಲಿ ಎಂದು ಜಾರಿಗೆ ತಂದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯು ಸಂಪೂರ್ಣವಾಗಿ ದಿಕ್ಕು ತಪ್ಪಿದೆ. ಯೋಜನೆಯ ನಿಯಮಗಳನ್ನೆಲ್ಲ ಗಾಳಿಗೆ ತೂರಲಾಗಿದೆ.
ನಿಯಮಬಾಹಿರ ಚಟುವಟಿಕೆಗಳು ನಡೆಯುತ್ತಿವೆ. ಕೆಲ ಪಟ್ಟಭದ್ರ ಹಿತಾಸಕ್ತಿಗಳು ನಕಲಿ ಜಾಬ್ಕಾರ್ಡ್ ಸೃಷ್ಟಿಸಿ ಕಾಮಗಾರಿಯ ದುಡ್ಡನ್ನು ಕೊಳ್ಳೆಹೊಡೆಯುತ್ತಿದ್ದಾರೆ. ಇಷ್ಟೆಲ್ಲ ಗೊತ್ತಿದ್ದರೂ ಅಧಿಕಾರಿಗಳು ಜಾಣ ಕುರುಡುತನ ಪ್ರದರ್ಶಿಸುತ್ತಿದ್ದಾರೆ. ಕೆಲವೊಂದು ಕಡೆ ಜೆಸಿಬಿ ಮೂಲಕ ಕೆಲಸ ಮಾಡಿಸಿ ಖಾತೆದಾರರ ಹೆಸರಲ್ಲಿ ನಕಲಿ ಬಿಲ್ ಸಿದ್ಧಪಡಿಸುತ್ತಿದ್ದಾರೆ.
ಅಲ್ಲದೆ ಹಲವಾರು ಕಡೆ ಅಧಿಕಾರಿಗಳ ಸಂಬಂಧಿಕರೇ ಜಾಬ್ ಕಾರ್ಡ್ ಹೊಂದಿದ್ದಾರೆ. ಇನ್ನು ಕೆಲವು ಕಡೆ ಕಾನೂನು ಬದ್ಧ ಜಾಬ್ಕಾರ್ಡ್ ಹೊಂದಿರುವ ಅಮಾಯಕ ಜನರೊಂದಿಗೆ ಶಾಮೀಲಾಗಿ ಕೆಲ ಗ್ರಾಮ ಪಂಚಾಯ್ತಿ ಸಿಬ್ಬಂದಿ ಹಣ ಲಪಟಾಯಿಸುತ್ತಿದ್ದಾರೆ. ಒಟ್ಟಾರೆಯಾಗಿ ಅವ್ಯವಹಾರದ ಆಗರವಾಗಿರುವ ಈ ಯೋಜನೆಗೆ ಕೇಂದ್ರ ಸರ್ಕಾರ ತುರ್ತಾಗಿ ಚಿಕಿತ್ಸೆ ನೀಡಬೇಕಾಗಿದೆ.