ಕಲಬುರ್ಗಿ: ದೇಶ ದ್ರೋಹ ಕಾಯ್ದೆಯನ್ನು ರದ್ದುಗೊಳಿಸುವ ಕಾಂಗ್ರೆಸ್ ಭರವಸೆ ಮೂರ್ಖತನದ ಪರಮಾವಧಿಯಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪ್ರಣಾಳಿಕೆ ಸುಳ್ಳಿನ ಪ್ರಣಾಳಿಕೆ. ಅದು ಕಾರ್ಯ ರೂಪಕ್ಕೆ ಬರುವುದಿಲ್ಲ. ಅವರಿಗೆ ಸಲಹೆ ಕೊಡುವವರು ಯಾರೂ ಇಲ್ಲ ಎಂದು ಹೇಳಿದರು.
ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿ ಸೋಲುತ್ತಾರೆ. ಹಾಸನದಲ್ಲಿ ನೂರಕ್ಕೆ ನೂರು ಗೆಲ್ಲುತ್ತೇವೆ. ತುಮಕೂರಿನಲ್ಲಿ ಟಫ್ ಫೈಟ್ ಕೊಡುತ್ತೇವೆ. ಕಲಬುರ್ಗಿ ಮತ್ತು ಬೀದರ್ ಸೇರಿದಂತೆ 22 ಕ್ಷೇತ್ರಗಳಲ್ಲಿ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ದೇಶದಲ್ಲಿ 300 ಸ್ಥಾನಗಳಲ್ಲಿ ಗೆಲುವು ಖಚಿತ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಲಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.