ದಾವಣಗೆರೆ: ಯುವ ಮತದಾರರನ್ನು ಸೆಳೆಯಲು ಸೇನೆ ಸಾಧನೆಯನ್ನು ಬಳಸಿಕೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.
ರಾಜ್ಯದಲ್ಲಿನ ಚುನಾವಣಾ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡ ಮೋದಿ ಅವರು, ಹೊಸ ಮತದಾರರು ತಮ್ಮ ಮತವನ್ನು ಸೇನೆಯ ಹೋರಾಟಕ್ಕೆ ಅರ್ಪಿಸಬೇಕು ಎಂದಿರುವುದು ಸ್ಪಷ್ಟವಾಗಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದರು.
ಬುಧವಾರ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಚುನಾವಣಾ ಆಯೋಗವೂ ಎಲ್ಲಾ ತನಿಖಾ ಸಂಸ್ಥೆಗಳಂತೆ ಮೋದಿ ನಿಯಂತ್ರಣದಲ್ಲಿ ಬರುವುದರಿಂದ ನ್ಯಾಯ ಸಿಗುವುದು ಅನುಮಾನ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ ಸಾಮಾಜಿಕ ನ್ಯಾಯವನ್ನು ಕಡೆಗಣಿಸಿದೆ. ರಾಜ್ಯದಲ್ಲಿ ಅಲ್ಪಸಂಖ್ಯಾತರಿಗಷ್ಟೇ ಅಲ್ಲ ಹಿಂದುಳಿದ ವರ್ಗದ ಒಬ್ಬರಿಗೂ ಟಿಕೆಟ್ ನೀಡಿಲ್ಲ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.