ಸಭಾಧ್ಯಕ್ಷರು ಕಚೇರಿಯಲ್ಲಿ ಇಲ್ಲದೇ ಇದ್ದುದರಿಂದ ವಿಧಾನಸಭೆ ಕಾರ್ಯದರ್ಶಿಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಪಿ.ಆರ್. ರಮೇಶ್ ಈ ಮನವಿ ಸಲ್ಲಿಸಿದರು. ಸಿಎಲ್ಪಿ ಸಭೆಗೆ ನಿರಂತರ ಗೈರಾಗುವ ಮೂಲಕ ಶಾಸಕರಾದ ಉಮೇಶ ಜಾಧವ, ರಮೇಶ ಜಾರಕಿಹೊಳಿ, ಬಿ. ನಾಗೇಂದ್ರ ಮತ್ತು ಮಹೇಶ ಕುಮಠಳ್ಳಿ ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘಿಸಿದ್ದಾರೆ. ಈ ಬಗ್ಗೆ ಹಿಂದೆಯೇ ದೂರು ನೀಡಿ, ಕಾಯ್ದೆಯಡಿ ಕ್ರಮ ತೆಗೆದುಕೊಳ್ಳುವಂತೆ ಕೋರಲಾಗಿದೆ. ಆ ಬಳಿಕ ಜಾಧವ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ, ಪಕ್ಷದ ದೂರು ಇತ್ಯರ್ಥಪಡಿಸುವರೆಗೆ ಅವರ ರಾಜೀನಾಮೆ ಅಂಗೀಕರಿಸಬಾರದು ಎಂದೂ ಮನವಿಯಲ್ಲಿ ವಿನಂತಿಸಲಾಗಿದೆ.