ಕೋಲ್ಕತ್ತ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಭಾನುವಾರ ಬೆಳಿಗ್ಗೆ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.
ಸೌರವ್ ಗಂಗೂಲಿ ಅವರಿಗೆ ಬುಧವಾರ ಮತ್ತೆ ಎದೆನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಕೋಲ್ಕತ್ತದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಗುರುವಾರ ಯಶಸ್ವಿಯಾಗಿ ಆ್ಯಂಜಿಯೊಪ್ಲಾಸ್ಟಿ ನಡೆಸಿರುವ ವೈದ್ಯರು, ಮತ್ತೆರಡು ಸ್ಟಂಟ್ ಆಳವಡಿಸಿದ್ದಾರೆ.
ಈ ವೈದ್ಯರ ತಂಡದಲ್ಲಿ ಹೃದ್ರೋಗ ತಜ್ಞೆ ಡಾ.ದೇವಿ ಶೆಟ್ಟಿ ಮತ್ತು ಡಾ.ಅಶ್ವಿನ್ ಮೆಹ್ತಾ ಅವರು ಕೂಡ ಇದ್ದರು.
ಸದ್ಯ ಅವರ ಆರೋಗ್ಯದಲ್ಲಿ ಸ್ಥಿರತೆ ಕಂಡುಬಂದಿದ್ದು, ಅವರನ್ನು ಭಾನುವಾರ ಬೆಳಿಗ್ಗೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದರು.
‘ಗಂಗೂಲಿ ಅವರ ಆರೋಗ್ಯದಲ್ಲಿ ಸ್ಥಿರತೆ ಕಂಡುಬಂದಿದೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಮುಂದಿನ ನಾಲ್ಕೈದು ದಿನಗಳಲ್ಲಿ ಅವರು ಸಹಜ ಜೀವನ ಕ್ರಮಕ್ಕೆ ಮರಳುತ್ತಾರೆ ಎಂಬ ನಿರೀಕ್ಷೆಯಿದೆ’ ಎಂದು ಹಿರಿಯ ವೈದ್ಯರೊಬ್ಬರು ತಿಳಿಸಿದರು.