ಚನ್ನಗಿರಿ: ‘ರಾಜ್ಯದಲ್ಲಿ ಒಂದು ವಾರದಿಂದ ಚುನಾವಣಾ ಚಿತ್ರಣವೇ ಬದಲಾಗುತ್ತಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಹಾಗೂ ಪ್ರಮುಖ ಮುಖಂಡರು ಬಿಜೆಪಿ ಸೇರುತ್ತಿದ್ದಾರೆ. ಬಿಜೆಪಿ ಸೀಟು ಗಳಿಕೆ ಸಂಖ್ಯೆ ಹೆಚ್ಚಾಗಲಿದ್ದು, ಪಕ್ಷವು ಅಧಿಕಾರಕ್ಕೆ ಬರುವುದು ಖಚಿತ’ ಎಂದು ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿಶ್ವಾಸ ವ್ಯಕ್ತಪಡಿಸಿದರು.ಪಟ್ಟಣದಲ್ಲಿ ಗುರುವಾರ ನಡೆದ ಬಿಜೆಪಿ ಸೇರ್ಪಡೆ ಸಮಾರಂಭದಲ್ಲಿ ಅವರು ಮಾತನಾಡಿದರು.
‘ಕಾಂಗ್ರೆಸ್ ಆಡಳಿತ ಕಂಡು ಜನ ಬೇಸತ್ತಿದ್ದಾರೆ. ಕ್ಷೇತ್ರದಲ್ಲಿ ಜನರ ಮನಸ್ಸಿನಲ್ಲಿ ಉಳಿಯುವಂತಹ ಯಾವುದೇ ಶಾಶ್ವತ ಯೋಜನೆಗಳು ಪ್ರಾರಂಭಗೊಂಡಿಲ್ಲ. ಕಳೆದ ತಿಂಗಳು ತರಾತುರಿಯಲ್ಲಿ ಕಾಮಗಾರಿಗಳನ್ನು ಆರಂಭಿಸಲಾಗಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಮಂಜೂರಾದ ಕಾಮಗಾರಿಗಳು ಇನ್ನೂ ಪೂರ್ಣಗೊಂಡಿಲ್ಲ ಎಂದು ಆರೋಪಿಸಿದರು.
ಪಟ್ಟಣ ಪಂಚಾಯ್ತಿ ಮಾಜಿ ಸದಸ್ಯ ಪಿ.ಬಿ. ನಾಯಕ, ಕಸಬಾ ಹೋಬಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಜಪ್ಪ, ತಾಲ್ಲೂಕು ಉಪ್ಪಾರ ಸಮಾಜದ ಮಾಜಿ ಅಧ್ಯಕ್ಷ ಕೃಷ್ಣಪ್ಪ, ಜೆಡಿಎಸ್ ಮುಖಂಡ ನಟರಾಜ್ ರಾಯ್ಕರ್, ನೀಲಪ್ಪ ಹಾಗೂ ವಾಲ್ಮೀಕಿ ಸಮಾಜದ ನೂರಾರು ಜನ ಮಾಡಾಳ್ ವಿರೂಪಾಕ್ಷಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರಿದರು.
ಜಿಲ್ಲಾ ಪರಿಶಿಷ್ಟ ಪಂಗಡ ಮೋರ್ಚಾದ ಅಧ್ಯಕ್ಷ ಪಿ. ಲೋಹಿತ್ ಕುಮಾರ್, ತಾಲ್ಲೂಕು ಘಟಕದ ಅಧ್ಯಕ್ಷ ಪರಮೇಶ್ವರಪ್ಪ ಹೊದಿಗೆರೆ, ಕುಬೇಂದ್ರೋಜಿರಾವ್, ಮಾಲತೇಶ್ ಉಪಸ್ಥಿತರಿದ್ದರು.