ವಾರಾಣಸಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ವಾರಾಣಸಿಯಲ್ಲಿ ದೋಣಿ ವಿಹಾರದ ಸಂದರ್ಭದಲ್ಲಿ ಪಕ್ಷಿಗಳಿಗೆ ಆಹಾರ ತಿನ್ನಿಸುತ್ತಿರುವ ದೃಶ್ಯವನ್ನು ಹಂಚಿರುವ ಭಾರತೀಯ ಕ್ರಿಕೆಟಿಗ ಶಿಖರ್ ಧವನ್ ವಿವಾದಕ್ಕೀಡಾಗಿದ್ದಾರೆ. ಇದರಿಂದಾಗಿ ಬೋಟ್ಮ್ಯಾನ್ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.
ಶಿಖರ್ ಧವನ್ ತಮ್ಮ ಅಧಿಕೃತ ಇನ್ಸ್ಟಾಗ್ರಾಂ ಖಾತೆಯಲ್ಲಿ ಬೋಟ್ ಸವಾರಿ ವೇಳೆಯಲ್ಲಿ ಹಕ್ಕಿಗಳಿಗೆ ಆಹಾರ ತಿನ್ನಿಸುವ ಚಿತ್ರಗಳನ್ನು ಹಂಚಿದ್ದರು.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾಡಳಿತವು, ಹಕ್ಕಿ ಜ್ವರ ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ಕಟ್ಟುನಿಟ್ಟಿನ ನಿಯಮ ಜಾರಿಯಲ್ಲಿರುವುದರಿಂದ ಬೋಟ್ಮ್ಯಾನ್ ವಿರುದ್ಧ ಕ್ರಮ ಕೈಗೊಳ್ಳುವುದಾಗಿಹೇಳಿದೆ.
ಪ್ರವಾಸಿ ಆಗಿದ್ದರಿಂದ ಶಿಖರ್ ಧವನ್ ಬಚಾವ್ ಆಗಿದ್ದಾರೆ. ಅಲ್ಲದೆ ಧವನ್ ವಿರುದ್ಧ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ವಾರಾಣಸಿ ಜಿಲ್ಲಾಧಿಕಾರಿ ಕೌಶಲ್ ರಾಜ್ ಶರ್ಮಾ ತಿಳಿಸಿದ್ದಾರೆ.
ದೋಣಿ ವಿಹಾರ ಸಂದರ್ಭದಲ್ಲಿ ಬೋಟ್ಮ್ಯಾನ್ಗಳು ಆಡಳಿತದ ಸೂಚನೆಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ. ಕೆಲವು ಪ್ರವಾಸಿಗರು ಹಕ್ಕಿಗಳಿಗೆ ಆಹಾರ ನೀಡುತ್ತಾರೆ. ಪ್ರವಾಸಿಗರಿಗೆ ಈ ಕುರಿತು ಮಾಹಿತಿಯಿರುವುದಿಲ್ಲ ಎಂದು ತಿಳಿಸಿದ್ದಾರೆ.
ಈ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ನೋಟಿಸ್ ಜಾರಿ ಮಾಡಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಇದರಿಂದಾಗಿ ಧವನ್ ಅವರನ್ನು ವಿಹಾರಕ್ಕೆ ಕೊಂಡೊಯ್ದಿರುವ ಬೋಟ್ಮ್ಯಾನ್ ಸಮಸ್ಯೆಗೆ ಸಿಲುಕಿದ್ದಾರೆ.
ಛತ್ತೀಸಗಡ, ಹರಿಯಾಣ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ ಹಾಗೂ ಪಂಜಾಬ್ ಸೇರಿದಂತೆ ಆರು ರಾಜ್ಯಗಳಲ್ಲಿ ಹಕ್ಕಿ ಜ್ವರ ಪತ್ತೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.